ಮಣಿಪಾಲ: ಸರಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ರಾಜ್ಯ ಹಿತರಕ್ಷಣಾ ಸಮಿತಿ ಉಡುಪಿ ಜಿಲ್ಲಾ ಘಟಕ ಹಾಗೂ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಂಘಟನೆಗಳ ಒಕ್ಕೂಟದ ವತಿಯಿಂದ ಅತಿಥಿ ಉಪನ್ಯಾಸಕರ ಸೇವಾ ಖಾಯಮಾತಿ , ಸೇವಾ ಭದ್ರತೆ , ಗೌರವ ಧನ ಹೆಚ್ಚಳ ಮತ್ತು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಉಡುಪಿ ಜಿಲ್ಲಾಡಳಿತ ಸಂಕೀರ್ಣದ ಎದುರು ಜಾಥ ಹಾಗೂ ಧರಣಿ ನಡೆಸಲಾಯಿತು.
ಈ ವೇಳೆ ಅತಿಥಿ ಉಪನ್ಯಾಸಕರು ಹದಿನೈದು ಇಪ್ಪತ್ತು ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ನಮ್ಮನ್ನು ಸರಕಾರ ಖಾಯಂ ನೌಕರರನ್ನಾಗಿ ಮಾಡಬೇಕು ಎಂದು ಹಲವು ಬಾರಿ ಮನವಿ ಮಾಡಿದ್ದೆವು . ಸರಕಾರ ನಮ್ಮ ಬೇಡಿಕೆಯನ್ನು ಈಡೇರಿಸುತ್ತಿಲ್ಲ. ಈ ಕುರಿತು ಹೋರಾಟಗಳನ್ನು ನಡೆಸಿದರೂ ಸರಕಾರ ನಮ್ಮನ್ನು ನಿರ್ಲಕ್ಷಿಸುತ್ತಲೇ ಇದೆ. ಇದೀಗ ಸಮಿತಿ ರಚನೆ ಮಾಡುತ್ತೇವೆ ಎಂದು ಹೇಳುತ್ತಿದೆ. ಈ ಅಧಿವೇಶನದಲ್ಲೇ ನಮ್ಮ ಬೇಡಿಕೆ ಈಡೇರಿಕೆ ಮಾಡಬೇಕು. ಇಲ್ಲವಾದಲ್ಲಿ ಇನ್ನು ಸುಮ್ಮನೆ ಕುಳಿತುಕೊಳ್ಳಲು ಸಾಧ್ಯವಿಲ್ಲ ಎಂದು ಅತಿಥಿ ಉಪನ್ಯಾಸಕರು ಅಸಮಾಧಾನ ಹೊರ ಹಾಕಿದ್ದಾರೆ .
ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದವರೆಗೆ ಜಾಥಾ ನಡೆಸಿದ ಅತಿಥಿ ಉಪನ್ಯಾಸಕರು ಕಚೇರಿ ಮುಂದೆ ಧರಣಿ ನಡೆಸಿದರು. ಆ ಬಳಿಕ ಜಿಲ್ಲಾಧಿಕಾರಿ ಕೂರ್ಮ ರಾವ್ ಅವರ ಮೂಲಕ ಸರಕಾರಕ್ಕೆ ಮನವಿಯನ್ನು ಸಲ್ಲಿಸಲಾಯಿತು.