ಮಂಗಳೂರು: ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ವಿರುದ್ಧದ ಆಕ್ಷೇಪಾರ್ಹ ಹೇಳಿಕೆಗೆ ಮಂಗಳೂರು ಉತ್ತರ ಶಾಸಕ ಡಾ.ವೈ. ಭರತ್ ಶೆಟ್ಟಿ ವಿರುದ್ಧ ಎಫ್ಐಆರ್ ದಾಖಲಿಸಿರುವುದನ್ನು ಖಂಡಿಸಿ ಬಿಜೆಪಿ ಮಂಗಳೂರಿನಲ್ಲಿ ಇಂದು ಪ್ರತಿಭಟನೆ ನಡೆಸಿತು.
ಕಾವೂರು ಜಂಕ್ಷನ್ ನಲ್ಲಿ ನಡೆದ ಪ್ರತಿಭಟನೆಯಲ್ಲಿ ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ಭಾಗಿ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸುನೀಲ್ ಕುಮಾರ್, ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಸೇರಿದಂತೆ ಜಿಲ್ಲೆಯ ಬಿಜೆಪಿ ಶಾಸಕರು ಭಾಗಿಯಾಗಿದ್ದರು.
ರಾಹುಲ್ ಗಾಂಧಿಗೆ ಸಂಸತ್ ಒಳಗೆ ಹೋಗಿ ಕೆನ್ನೆಗೆ ಬಾರಿಸಬೇಕಿತ್ತು ಅನ್ನಿಸುತ್ತಿದೆ ಎಂದು ಶಾಸಕ ಭರತ್ ಶೆಟ್ಟಿ ಕಾವೂರಿನಲ್ಲಿ ಸೋಮವಾರ ನಡೆದಿದ್ದ ಬಿಜೆಪಿ ಪ್ರತಿಭಟನೆಯಲ್ಲಿ ಪ್ರತಿಭಟನಾ ಭಾಷಣ ಮಾಡಿದ್ದರು.
ಅಲ್ಲದೇ ಶಸ್ತ್ರಾಸ್ತ್ರ ಉಪಯೋಗಿಸಿ ಹೋರಾಟ ಮಾಡೋಣ ಎಂಬುದಾಗಿ ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ
ಮಂಗಳೂರು ಮಹಾನಗರ ಪಾಲಿಕೆ ಸದಸ್ಯ ಅನಿಲ್ ಕುಮಾರ್ ನೀಡಿದ್ದ ದೂರಿನ ಮೇಲೆ ಎಫ್ಐಆರ್ ದಾಖಲಾಗಿತ್ತು.
ಪ್ರತಿಭಟನೆಯಲ್ಲಿ ನೂರಾರು ಸಂಖ್ಯೆಯಲ್ಲಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಕೂಡಾ ಭಾಗಿಯಾಗಿದ್ದು, ಕೆಎಸ್ಆರ್ಪಿ ಮತ್ತು ಸಿಎಆರ್ ಸೇರಿದಂತೆ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.
ಪ್ರತಿಭಟನಾ ಸಭೆ ಬಳಿಕ ಕಾವೂರು ಪೊಲೀಸ್ ಠಾಣೆಗೆ ಮೆರವಣಿಗೆ ಮೂಲಕ ವಿಪಕ್ಷ ನಾಯಕ ಆರ್. ಅಶೋಕ್ ನೇತೃತ್ವದಲ್ಲಿ ಪ್ರತಿಭಟನಾಕಾರರು ತೆರಳಿದ್ದು, ಪೊಲೀಸ್ ಠಾಣೆಗೆ ತೆರಳದಂತೆ ಪ್ರತಿಭಟನಾಕಾರರಿಗೆ ಬ್ಯಾರಿಕೇಡ್ ಅಳವಡಿಸಿ ಪೊಲೀಸರು ತಡೆ ಒಡ್ಡಿದ್ದರು. ನಂತರ ಬಿಜೆಪಿ ನಾಯಕರಿಗೆ ಮಾತ್ರ ಠಾಣೆಯೊಳಗೆ ಭರತ್ ಶೆಟ್ಟಿ ಜಾಮೀನು ಪ್ರಕ್ರಿಯೆಗಾಗಿ ಅವಕಾಶ ಕಲ್ಪಿಸಲಾಗಿತ್ತು.