ಬೆಳ್ತಂಗಡಿ: ರಾಷ್ಟ್ರೀಯ ಹೆದ್ದಾರಿ 73ರ ಪುಂಜಾಲಕಟ್ಟೆ-ಚಾರ್ಮಾಡಿ ರಸ್ತೆ ಅಗಲೀಕರಣ ಕಾಮಗಾರಿ ಜನರನ್ನು ಮೃತ್ಯುಕೂಪಕ್ಕೆ ತಳ್ಳುತ್ತಿದ್ದು, ವಾಹನ ಸವಾರರು ರಸ್ತೆಯಲ್ಲಿ ಬೀಳುತ್ತಿರುವುದನ್ನು ಗಮನಿಸಿ ಉಜಿರೆಯ ಹೋಟೆಲ್ ಮಾಲಕರೋರ್ವರು ಏಕಾಂಕಗಿಯಾಗಿ ರಸ್ತೆ ಮಧ್ಯೆ ಕುಳಿತು ಹೋರಾಟ ನಡೆಸಿದ್ದಾರೆ.
ರಸ್ತೆ ಅಗಲೀಕರಣ ಕಾಮಗಾರಿಯಿಂದ ಉಜಿರೆಯಿಂದ ಮುಂಡಾಜೆ ಸಾಗುವ ರಸ್ತೆ, ಬೆಳ್ತಂಗಡಿಯಿಂದ ಮುಂದಕ್ಕೆ ಕಾಶಿಬೆಟ್ಟು ಸಮೀಪ, ಮಡಂತ್ಯಾರಿಂದ ಮುಂದಕ್ಕೆ ಬರುವ ರಸ್ತೆಯಲ್ಲಿ ದ್ವಿಚಕ್ರ ವಾಹನ ಸವಾರರು ಸ್ವಲ್ಪ ಏರುಪೇರಾದರೂ ಬಿದ್ದು ಅನಾಹುತ ಸಂಭವಿಸುತ್ತಿದೆ. ಉಜಿರೆಯಲ್ಲಿ ರವಿವಾರ ಹೆದ್ದಾರಿ ಕೆಸರುಮಯವಾದ ಪರಿಣಾಮ ಎರಡು ಮೂರು ದ್ವಿಚಕ್ರ ಸವಾರರು ಅಪಾಘಾತಕ್ಕೀಡಾಗಿದ್ದಾರೆ ಎಂದು ತಿಳಿಸಿದರು.
ಇನ್ನು ಕಳೆದ ವಾರ ದ.ಕ.ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಬಿಸಿರೋಡ್ ಬಿಂದ ಚಾರ್ಮಾಡಿ ವರೆಗೆ ರಸ್ತೆ ಸಮಸ್ಯೆ ಕುರಿತು ಪರಿಶೀಲಿಸಿ ಸಂಬಂಧಪಟ್ಟ ಗುತ್ತಿಗೆದಾರರಿಗೆ ವಾರದೊಳಗೆ ಸಮಸ್ಯೆ ಬಗೆಹರಿಸಲು ಸೂಚಿಸಿದ್ದಾರೆ. ಆದರೆ ಬೇಕಾಬಿಟ್ಟಿ ಕಾಮಗಾರಿಯಿಂದ ಜಿಲ್ಲಾಧಿಕಾರಿಗಳ ಆಜ್ಞೆಗೂ ಕವಡೆ ಕಿಮ್ಮತ್ತಿಲ್ಲ ಎಂಬಂತಾಗಿದೆ. ಇದರ ಬಗ್ಗೆ ತಕ್ಷಣ ಸೂಕ್ತ ಕ್ರಮ ವಹಿಸಬೇಕು. ಇಲ್ಲವೇ ನಿರಂತರ ಹೋರಾಟ ನಡೆಸುವುದಾಗಿ ಉಜಿರೆ ಹೋಟೆಲ್ ಮಾಲೀಕ ಪ್ರವೀಣ್ ಹಳ್ಳಿಮನೆ ಪ್ರತಿಭಟನೆ ನಡೆಸಿ ಆಗ್ರಹಿಸಿದ್ದಾರೆ.