ಪುತ್ತೂರು: ಬಿಜೆಪಿ ನಾಯಕರ ಬ್ಯಾನರ್ ಹಾಕಿ ಶ್ರದ್ಧಾಂಜಲಿ ಸಲ್ಲಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ 7 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.ಇಬ್ಬರನ್ನು ಸೋಮವಾರ ಸಂಜೆ ಬಂಧಿಸಲಾಗಿದ್ದು, ಬಂಧಿತರ ಸಂಖ್ಯೆ 9ಕ್ಕೆ ಏರಿಕೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪುತ್ತೂರು ತಾಲೂಕಿನ ನರಿಮೊಗರು ನಿವಾಸಿಗಳಾದ ಅಭಿ ಯಾನೆ ಅವಿನಾಶ್, ಶಿವರಾಮ್, ಚೈತ್ರೇಶ್, ಈಶ್ವರ್, ನಿಶಾಂತ್, ದೀಕ್ಷಿತ್, ಗುರುಪ್ರಸಾದ್ ಬಂಧಿತರು. ವಿಶ್ವನಾಥ ಮತ್ತು ಮಾಧವ ಬಂಧಿತರು.
ನಗರಸಭಾ ವ್ಯಾಪ್ತಿಯ ಬಸ್ ನಿಲ್ದಾಣದ ಮುಂಭಾಗದಲ್ಲಿರುವ ಅರಣ್ಯ ಇಲಾಖೆಯ ಆವರಣದ ಬಳಿ ನಳಿನ್ ಕುಮಾರ್ ಕಟೀಲ್ ಮತ್ತು ಡಿ.ವಿ.ಸದಾನಂದ ಗೌಡರ ಹೆಸರಿನಲ್ಲಿ ಅವಹೇಳನಕಾರಿ ಬರಹ ಬರೆದು ಸರಕಾರಿ ಆಸ್ತಿ ಪಾಸ್ತಿ ಮತ್ತು ಸಾರ್ವಜನಿಕ ಸ್ಥಳ ವಿರೂಪಗೊಳಿಸಿರುವ ಬಗ್ಗೆ ಪುತ್ತೂರು ನಗರಸಭೆಯ ಮುಖ್ಯಾಧಿಕಾರಿ ಮಧು ಎಸ್ ಮನೋಹರ್ ಅವರು ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು.ದೂರು ದಾಖಲಿಸಿಕೊಂಡಿರುವ ಪೊಲೀಸರು ತಕ್ಷಣವೇ ಕಾರ್ಯಾಚರಣೆ ನಡೆಸಿ ವಿಶ್ವನಾಥ ಮತ್ತು ಮಾಧವರನ್ನು ಬಂಧಿಸಿದ್ದರು. ಕಾರ್ಯಾಚರಣೆ ಮುಂದುವರಿಸಿದ ಪೊಲೀಸರು ಮತ್ತೆ 7 ಮಂದಿಯನ್ನು ಬಂಧಿಸಿದ್ದಾರೆ.