ಜೈಪುರ : ರಾಜಸ್ಥಾನದ ಗೆಹ್ಲೋಟ್ ನೇತೃತ್ವದ ಕಾಂಗ್ರೆಸ್ ಸರ್ಕಾರದ ಭವಿಷ್ಯ ಇಂದು ನಿರ್ಧಾರವಾಗಲಿದೆ. ಒಂದೆಡೆ ಸರ್ಕಾರ ಉಳಿಸಿಕೊಳ್ಳಲು ಜೈಪುರದಲ್ಲಿ ಕಾಂಗ್ರೆಸ್ ಇನ್ನಿಲ್ಲದ ಕಸರತ್ತು ನಡೆಸುತ್ತಿದೆ. ಇನ್ನೊಂದೆಡೆ ಬಂಡಾಯದ ಬಾವುಟ ಹಿಡಿದು ದೆಹಲಿ ತಲುಪಿರುವ ಉಪ ಮುಖ್ಯಮಂತ್ರಿ ಯುವ ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ದೆಹಲಿಯಲ್ಲಿ ಇಂದು ಬಿಜೆಪಿಯ ರಾಷ್ಟ್ರೀಯ ನಾಯಕರನ್ನು ಭೇಟಿಯಾಗುತ್ತಾರೆ ಎಂದು ಹೇಳಲಾಗುತ್ತಿದೆ.
ಅದರಂತೆ ಇದೀಗ ರಾಜಸ್ಥಾನದಲ್ಲೂ ಕಾಂಗ್ರೆಸ್ನ ಯುವ ಮುಖಂಡ, ಡಿಸಿಎಂ ಸಚಿನ್ ಪೈಲಟ್ ಕಾಂಗ್ರೆಸ್ ಆಡಳಿತದ ವಿರುದ್ಧ ಸಿಡಿದೆದ್ದಿದ್ದಾರೆ. ಅಲ್ಲದೆ, ತಮಗೆ 30ಕ್ಕೂ ಹೆಚ್ಚು ಶಾಸಕರ ಬೆಂಬಲವಿದ್ದು, ಅಶೋಕ್ ಗೆಹ್ಲೋಟ್ ನೇತೃತ್ವದ ಸರ್ಕಾರ ಅಲ್ಪಮತಕ್ಕೆ ಬಿದ್ದಿದೆ ಎಂದು ಹೇಳುತ್ತಿದ್ದಾರೆ.
ರಾಜಸ್ಥಾನದ ರಾಜಧಾನಿ ಜೈಪುರದಲ್ಲಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಕರೆದಿರುವ ಶಾಸಕಾಂಗ ಪಕ್ಷದ ಸಭೆಯಲ್ಲಿ ಎಷ್ಟು ಮಂದಿ ಶಾಸಕರು ಪಾಲ್ಗೊಳ್ಳುತ್ತಾರೆ ಎಂಬುದು ಕಾಂಗ್ರೆಸ್ ಸರ್ಕಾರದ ಭವಿಷ್ಯವನ್ನು ನಿರ್ಧರಿಸಲಿದೆ. ಹಾಗೆಯೇ ಉಪ ಮುಖ್ಯಮಂತ್ರಿ ಸಚಿನ್ ಪೈಲಟ್ ದೆಹಲಿಯಲ್ಲಿ ಬಿಜೆಪಿ ನಾಯಕರನ್ನು ಭೇಟಿ ಮಾಡಿದ್ದೇ ಆದರೆ ಸರ್ಕಾರ ಬೀಳುತ್ತದೆ ಎಂಬುದು ರಾಜಕೀಯ ಪಂಡಿತರ ಮಾತು. ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ರಾಜಸ್ಥಾನ ಕಾಂಗ್ರೆಸ್ ಉಸ್ತುವಾರಿ ಪ್ರಧಾನ ಕಾರ್ಯದರ್ಶಿ ಅವಿನಾಶ್ ಪಾಂಡೆ, ಕಾಂಗ್ರೆಸ್ ಪಕ್ಷದ ಸಂಘಟನಾ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್, ರಾಷ್ಟ್ರೀಯ ನಾಯಕರಾದ ಅಜಯ್ ಮಾಖನ್ ಮತ್ತು ರಣದೀಪ್ ಸುರ್ಜೇವಾಲಾ ನೇತೃತ್ವದಲ್ಲಿ ಬೆಳಿಗ್ಗೆ 10.30ಕ್ಕೆ ಮಹತ್ವದ ಶಾಸಕಾಂಗ ಪಕ್ಷದ ಸಭೆ ನಡೆಯಲಿದ್ದು, ಸಭೆಯಲ್ಲಿ ಶಾಸಕರಿಂದ ಸಹಿ ಸಂಗ್ರಹ ಮಾಡಲಾಗುತ್ತದೆ ಎಂದು ತಿಳಿದುಬಂದಿದೆ.
ಸಚಿನ್ ಪೈಲಟ್ ಬಳಿ 30 ಶಾಸಕರಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ ಅವರ ಪಟ್ಟಿಯ ಬಿಡುಗಡೆ ಆಗಿಲ್ಲ. 30 ಶಾಸಕರು ಯಾರು ಎಂಬುದು ತಿಳಿದುಬಂದಿಲ್ಲ. ಸಚಿನ್ ಪೈಲಟ್ ಜೊತೆ ದೆಹಲಿಗೆ ಬಂದಿದ್ದ ಮೂವರು ಶಾಸಕರು ‘ತಾವು ಕಾಂಗ್ರೆಸ್ ಪಕ್ಷ ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧ’ ಎಂದು ಉಲ್ಟಾ ಹೊಡೆದಿದ್ದಾರೆ.
ಈ ಭಿನ್ನಾಭಿಪ್ರಾಯ ಕಂದಕವನ್ನು ಕಿರಿದಾಗಿಸಲು ಕಾಂಗ್ರೆಸ್ ಮುಖಂಡರು ಪ್ರಯತ್ನಿಸುತ್ತಿದ್ದಾರೆ. ಅಶೋಕ್ ಗೆಹ್ಲೋಟ್ ಸೋಮವಾರ ಬೆಳಗ್ಗೆ ಶಾಸಕಾಂಗ ಪಕ್ಷದ ಸಭೆ ಕರೆದಿದ್ದು, 109 ಶಾಸಕರ ಬೆಂಬಲ ಇರುವುದಾಗಿ ಹೇಳಿಕೊಂಡಿದ್ದಾರೆ.
ಪೈಲಟ್ ಸಭೆಯಲ್ಲಿ ಭಾಗವಹಿಸಲು ವಿಫಲರಾದರೆ ಪಕ್ಷದಿಂದ ಹೋಹಕಲಾಗುವುದೇ ?
“ಸಚಿನ್ ಪೈಲಟ್ ಮತ್ತು ಅವರ ಬೆಂಬಲಿಗ ಶಾಸಕರು ಶಾಸಕಾಂಗ ಪಕ್ಷದ ಸಭೆಗೆ ಹಾಜರಾಗದಿದ್ದರೆ ಅವರನ್ನು ಪಕ್ಷದಿಂದ ಹೊರಹಾಕುವ ಸಾಧ್ಯತೆಯಿದೆ. ರಘುವೀರ್ ಮೀನಾ ಅವರನ್ನು ಸಚಿನ್ ಪೈಲಟ್ ಬದಲಿಗೆ ಹೊಸ ಕಾಂಗ್ರೆಸ್ ರಾಜ್ಯ ಅಧ್ಯಕ್ಷರನ್ನಾಗಿ ನೇಮಕ ಮಾಡುವ ಸಾಧ್ಯತೆಯಿದೆ” ಎಂದು ಮೂಲಗಳು ತಿಳಿಸಿವೆ.