ಮಂಗಳೂರು; ಕಾಂಗ್ರೆಸ್ ಕಾರ್ಯಕರ್ತರು ಭಜರಂಗದಳ ಹಾಗೂ ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ ಪರಿಣಾಮ ಗಂಭೀರ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಭಜರಂಗದಳ ಹಾಗೂ ಬಿಜೆಪಿ ಕಾರ್ಯಕರ್ತರನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಹಾಗೂ ಸಂಸದ ನಳೀನ್ ಕುಮಾರ್ ಕಟೀಲ್ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.
ಇನ್ನು ಈ ವಿಚಾರ ತಿಳಿದ ಕೂಡಲೇ ಮಂಗಳೂರು ಪೋಲೀಸ್ ವರಿಷ್ಠಾಧಿಕಾರಿಯನ್ನು ಪೋನ್ ಮುಖಾಂತರ ಸಂಪರ್ಕಿಸಿ ಆರೋಪಿಗಳನ್ನು ತಕ್ಷಣ ಬಂಧಿಸಿ ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದಾನೆ ಎಂದಿದ್ದಾರೆ.ಅಲ್ಲದೇ ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ಶಾಂತಿ ಕದಡುವ ವ್ಯಕ್ತಿಗಳಿಗೆ ಅವಕಾಶ ನೀಡುವುದಿಲ್ಲ ಎಂದು ಹೇಳಿದ ಅವರು, ಬಿಜೆಪಿ ಹಾಗೂ ಹಿಂದೂ ಕಾರ್ಯಕರ್ತರ ಮೇಲೆ ಉದ್ದೇಶ ಪೂರ್ವಕವಾಗಿ ಹಲ್ಲೆ ನಡೆಸಿ ಶಾಂತಿಭಂಗ ಉಂಟುಮಾಡಿದರೆ ಅವರ ಮೇಲೆ ಕಾನೂನು ಕ್ರಮ ಜರಗಿಸಲಾಗುವುದು ಎಂದು ಅವರು ತಿಳಿಸಿದರು. ಹಿಂದೂ ಕಾರ್ಯಕರ್ತರ ಮೇಲಿನ ದೌರ್ಜನ್ಯವನ್ನು ಖಂಡಿಸಿದ ಅವರು ಯಾವತ್ತೂ ನಿಮ್ಮ ಜೊತೆ ನಾವಿದ್ದೇವೆ ಎಂದು ಕಾರ್ಯಕರ್ತರಿಗೆ ಭರವಸೆ ನೀಡಿದ್ದಾರೆ.
ಈ ಸಂದರ್ಭದಲ್ಲಿ ಬಿಜೆಪಿ ಪ್ರಮುಖರಾದ ಬೃಜೇಶ್ ಚೌಟ, ಸುದರ್ಶನ ಬಜ, ಗಣೇಶ್ ರೈ ಮಾಣಿ, ಹರೀಶ್ ಶೆಟ್ಟಿ ಪೆರಾಜೆ, ವಿನೀತ್ ಪೆರಾಜೆ, ಸಂಪತ್ ಸುವರ್ಣ ಕಡೇಶಿವಾಲಯ,ವಿಜಯ ಮಾಣಿ ಮತ್ತಿತರರು ಉಪಸ್ಥಿತರಿದ್ದರು.