ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ಸಂಬಂಧ ಯುವತಿ ಬಿಡುಗಡೆ ಮಾಡಿರುವ ವಿಡಿಯೋ ಹೇಳಿಕೆ ಆಧರಿಸಿ ಕರ್ನಾಟಕ ರಾಜ್ಯ ಮಹಿಳಾ ಆಯೋಗ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದೆ.
ಸಿಡಿ ಪ್ರಕರಣದಲ್ಲಿ ತನಗೆ ರಕ್ಷಣ ನೀಡಬೇಕು ಎಂದು ಕೋರಿ ಮಹಿಳೆ ವಿಡಿಯೋ ಮೂಲಕ ಮನವಿ ಮಾಡಿದ್ದಳು. ಇದರ ಬೆನ್ನಲ್ಲೇ ಮಹಿಳಾ ಆಯೋಗ ಸುಮೋಟೋ ಕೇಸ್ ದಾಖಲಿಸಿಕೊಂಡಿದೆ.
ನಿನ್ನೆ ಬಿಡುಗಡೆ ಮಾಡಿರುವ ವಿಡಿಯೋದಲ್ಲಿ ಮಾತನಾಡಿರುವ ಸಂತ್ರಸ್ತೆ, “ನಮ್ಮ ಹಿಂದೆ ಯಾರೂ ಇಲ್ಲ. ಯಾವ ರಾಜಕೀಯದವರು ಇಲ್ಲ. ವಿಡಿಯೋವನ್ನು ಹೇಗೆ ಮಾಡಿದರು ಎನ್ನುವುದು ನನಗೆ ಗೊತ್ತಿಲ್ಲ. ಯಾರು ಈ ವಿಡಿಯೋ ಬಿಡುಗಡೆ ಮಾಡಿದ್ದಾರೋ ಗೊತ್ತಿಲ್ಲ. ನನ್ನ ಮಾನ ಮರ್ಯಾದೆ ಊರು ತುಂಬ ಹರಾಜಾಗಿದೆ. ನಾನು ಮೂರ್ನಾಲ್ಕು ಬಾರಿ ಆತ್ಮಹತ್ಯೆಗೆ ಯತ್ನಿಸಿದ್ದೇನೆ. ನನ್ನ ಅಪ್ಪ-ಅಮ್ಮ ಕೂಡ ಹಲವು ಸಲ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಹಾಗಾಗಿ ನನಗೆ, ನನ್ನ ಕುಟುಂಬಸ್ಥರಿಗೆ ರಕ್ಷಣೆ ನೀಡುವಂತೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿಗೆ ಮನವಿ ಮಾಡುತ್ತೇನೆ ಎಂದು ಹೇಳಿದ್ದಾರೆ.