ಬೆಂಗಳೂರು: 2021-22ನೇ ಸಾಲಿನ ಶೈಕ್ಷಣಿಕ ಚಟುವಟಿಕೆ ಆರಂಭವಾಗಿರುವುದರಿಂದ ಕೋವಿಡ್ ನಿಯಂತ್ರಣದ ಕರ್ತವ್ಯಕ್ಕೆ ನಿಯೋಜಿಸಲಾಗಿರುವ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಕರು, ಮುಖ್ಯ ಶಿಕ್ಷಕರು ಮತ್ತು ಸಿಬ್ಬಂದಿಯನ್ನು ಕರ್ತವ್ಯದಿಂದ ತಕ್ಷಣ ಬಿಡುಗಡೆ ಮಾಡಬೇಕು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಹಾಗೂ ಎಲ್ಲ ಜಿಲ್ಲಾಧಿಕಾರಿಗಳಿಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ವಿ. ಅನ್ಬುಕುಮಾರ್ ಪತ್ರ ಬರೆದಿದ್ದಾರೆ.
ಇದೇ 15ರಿಂದ 2021-22ನೇ ಸಾಲಿನ ಶೈಕ್ಷಣಿಕ ವರ್ಷದ ದಾಖಲಾತಿ ಪ್ರಕ್ರಿಯೆ ಆರಂಭವಾಗಿದ್ದು, ಶಾಲೆಗಳಿಗೆ ಶಿಕ್ಷಕರು ತೆರಳಬೇಕಿದೆ. ಆದರೆ, ಬಹುತೇಕ ಶಿಕ್ಷಕರು ಕೋವಿಡ್ ಕರ್ತವ್ಯದಲ್ಲಿ ನಿರತರಾಗಿರುವುದರಿಂದ ಶಾಲೆಗೆ ಹೋಗುವುದು ಕಷ್ಟವಾಗಿದೆ. ಪ್ರಸ್ತುತ ಸನ್ನಿವೇಶದಲ್ಲಿ ನೇರ ತರಗತಿಗಳು ಆರಂಭ ಆಗದೇ ಇದ್ದರೂ, ಮಕ್ಕಳ ಶೈಕ್ಷಣಿಕ ಹಿತದೃಷ್ಟಿಯಿಂದ ಆನ್ಲೈನ್, ಆಪ್ಲೈನ್, ದೂರದರ್ಶನ, ಬಾನುಲಿ, ಸ್ಮಾರ್ಟ್ ಫೋನ್, ಲ್ಯಾಪ್ಟಾಪ್ನಂಥ ಪರ್ಯಾಯ ಮಾರ್ಗಗಳ ಮೂಲಕ ಮಕ್ಕಳ ಕಲಿಕೆಯಲ್ಲಿ ನಿರಂತರತೆಯನ್ನು ಕಾಯ್ದುಕೊಳ್ಳಲು ಶಿಕ್ಷಕರು ಕಾರ್ಯನಿರ್ವಹಿಸುವುದು ಅನಿವಾರ್ಯವಾಗಿದೆ ಎಂದು ಪತ್ರದಲ್ಲಿ ಅವರು ವಿವರಿಸಿದ್ದಾರೆ.
‘ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಗಳನ್ನು ಜುಲೈ ಮೂರನೇ ವಾರದಲ್ಲಿ ನಡೆಸಬೇಕಾಗಿದೆ. ಅಲ್ಲದೆ, ಕೋವಿಡ್ ಕಾರಣದಿಂದ ಈ ಬಾರಿ ಪರೀಕ್ಷಾ ಕೇಂದ್ರಗಳನ್ನು ಹೆಚ್ಚಿಸಬೇಕಿದೆ. ಈ ಕೆಲಸಗಳಿಗೆ ಶಿಕ್ಷಕರು, ಮುಖ್ಯ ಶಿಕ್ಷಕರು ಮತ್ತು ಸಿಬ್ಬಂದಿಯ ಸೇವೆ ಅಗತ್ಯವಾಗಿದೆ’ ಎಂದೂ ಪತ್ರದಲ್ಲಿ ತಿಳಿಸಿದ್ದಾರೆ. ಹಾಗಾಗಿ ಶೀಘ್ರದಲ್ಲೇ ಶಿಕ್ಷಕರಿಗೆ ಈ ಕೆಲಸದಿಂದ ಮುಕ್ತಿ ಸಿಗಲಿದೆ.