Tuesday, June 30, 2026
Homeತಾಜಾ ಸುದ್ದಿಹಿಂದೂ ಕಾರ್ಯಕರ್ತರ ಹತ್ಯೆಗೆ ನ್ಯಾಯ ಸಿಗದಿದ್ದರೆ ರಾಜೀನಾಮೆ: ಸರ್ಕಾರಕ್ಕೇ ಎಚ್ಚರಿಕೆ ನೀಡಿದ ರೇಣುಕಾಚಾರ್ಯ

ಹಿಂದೂ ಕಾರ್ಯಕರ್ತರ ಹತ್ಯೆಗೆ ನ್ಯಾಯ ಸಿಗದಿದ್ದರೆ ರಾಜೀನಾಮೆ: ಸರ್ಕಾರಕ್ಕೇ ಎಚ್ಚರಿಕೆ ನೀಡಿದ ರೇಣುಕಾಚಾರ್ಯ

- Advertisement -
- Advertisement -

ಬಿಜೆಪಿ ಸರ್ಕಾರಕ್ಕೆ ಹಿಂದೂ ಕಾರ್ಯಕರ್ತ ಪ್ರವೀಣ್ ಕೊಲೆ ಪ್ರಕರಣವೀಗ ಬಿಸಿತುಪ್ಪವಾಗಿ ಪರಿಣಮಿಸಿದೆ. ಈ ಬಗ್ಗೆ ಕಾರ್ಯಕರ್ತರ ಜೊತೆಗೆ ಸ್ವಪಕ್ಷೀಯ ಶಾಸಕ ರೇಣುಕಾಚಾರ್ಯ ಸರ್ಕಾರಕ್ಕೆ ಎಚ್ಚರಿಕೆ ಸಂದೇಶ ರವಾನಿಸಿದ್ದು, “ಹಿಂದೂ ಕಾರ್ಯಕರ್ತರಿಗಾಗಿ ರಾಜೀನಾಮೆಗೂ ಸಿದ್ಧ” ಎಂದು ತಿಳಿಸಿದ್ದಾರೆ.

ಈ ಕೊಲೆ ಪ್ರಕರಣದ ವಿಚಾರವಾಗಿ ಮಾಜಿ ಸಚಿವ ಈಶ್ವರಪ್ಪ ಅಸಮಾಧಾನ ಹೊರಹಾಕಿರುವ ಬೆನ್ನಲ್ಲೇ ಮತ್ತೋರ್ವ ಶಾಸಕ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ಕೂಡಾ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. “ಹಿಂದೂ ಕಾರ್ಯಕರ್ತರಿಗೆ ನ್ಯಾಯ ಕೊಡಿಸುವ ಸಲುವಾಗಿ ರಾಜೀನಾಮೆಗೂ ನಾನು ಸಿದ್ಧ” ಎಂದು ಅವರು ಹೇಳಿಕೊಂಡಿದ್ದಾರೆ. ಈ ಬಗ್ಗೆ ಟ್ವಿಟರ್‌ನಲ್ಲಿ ರೇಣುಕಾಚಾರ್ಯ ಆಕ್ರೋಶ ಹೊರಹಾಕಿದ್ದಾರೆ.

ರೇಣುಕಾಚಾರ್ಯ ಅವರು ತಮ್ಮ ಟ್ವೀಟ್‌ನಲ್ಲಿ, “ರಾಜ್ಯದಲ್ಲಿ ಪದೇ ಪದೇ ಹಿಂದೂ ಕಾರ್ಯಕರ್ತರ ಹತ್ಯೆಗಳು ನಡೆಯುತ್ತಿದ್ದು, ರಾಜ್ಯದ ಉದ್ದಗಲಕ್ಕೆ ಹಿಂದೂ ಕಾರ್ಯಕರ್ತರು ರೊಚ್ಚಿಗೆದ್ದಿದ್ದಾರೆ. ನಮ್ಮ ಸರ್ಕಾರ ಶ್ರೀ ಯೋಗಿ ಆದಿತ್ಯನಾಥ್ ಜಿ ಅವರ ಸರ್ಕಾರದ ಮಾದರಿಯಲ್ಲಿ ದುಷ್ಕರ್ಮಿಗಳ ವಿರುದ್ಧ ನಿರ್ದಾಕ್ಷಣ್ಯ ಕಠಿಣ ಕ್ರಮ ತೆಗೆದುಕೊಂಡರೆ ಮಾತ್ರ ನಮ್ಮ ಸರ್ಕಾರ ಹಾಗೂ ಸಂಘಟನೆಗೆ ವರ್ಚಸ್ಸು ಉಳಿಯಲು ಸಾಧ್ಯ.” ಎಂದು ಬರೆದುಕೊಂಡಿದ್ದಾರೆ.

ಇನ್ನು ಪ್ರತಿ ಬಾರಿ ಹಿಂದೂ ಕಾರ್ಯಕರ್ತರುಗಳ ಹತ್ಯೆಯಾದಾಗ ಭಾವಪೂರ್ಣ ಶ್ರದ್ಧಾಂಜಲಿ, ಕಠಿಣ ಕ್ರಮಕ್ಕೆ ಒತ್ತಾಯ, ದುಷ್ಕರ್ಮಿಗಳನ್ನು ಗಲ್ಲಿಗೇರಿಸಬೇಕು, ಓಂ ಶಾಂತಿ ಎನ್ನುವ ನಮ್ಮ ಸೋಶಿಯಲ್ ಮೀಡಿಯಾ ಪೋಸ್ಟ್‌ಗಳಿಂದ ಏನೂ ಪ್ರಯೋಜನವಿಲ್ಲ. ನಮ್ಮ ಹಿಂದೂ ಕಾರ್ಯಕರ್ತರನ್ನು ರಕ್ಷಿಸಲು ನಮ್ಮಿಂದ ಸಾಧ್ಯವಾಗದಿದ್ದರೆ ನಾವು ಅಧಿಕಾರದಲ್ಲಿದ್ದೂ ಏನು ಪ್ರಯೋಜನ? ನಮ್ಮ ಸರ್ಕಾರ ಹಿಂದೂ ಕಾರ್ಯಕರ್ತರ ನಂಬಿಕೆಯನ್ನು ಉಳಿಸಿಕೊಳ್ಳಬೇಕಾದರೆ ದುಷ್ಕರ್ಮಿಗಳನ್ನು ನಡು ರಸ್ತೆಯಲ್ಲಿಯೇ ಎನ್‌ಕೌಂಟರ್ ಮಾಡಬೇಕು ಎಂದು ಅಕ್ರೋಶ ವ್ಯಕ್ತಪಡಿಸಿದ್ದಾರೆ.

”ನನಗೆ ವೈಯಕ್ತಿಕವಾಗಿ ಅಧಿಕಾರಕ್ಕಿಂತ ನಮ್ಮ ಹಿಂದೂ ಕಾರ್ಯಕರ್ತರ ರಕ್ಷಣೆಯೇ ಮುಖ್ಯ. ಆದ್ದರಿಂದ ನಮ್ಮ ಸರ್ಕಾರ ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳದಿದ್ದರೆ ನಾನು ನನ್ನ ಮತ ಕ್ಷೇತ್ರದ ಮುಖಂಡರು ಹಾಗೂ ಕಾರ್ಯಕರ್ತರ ಜೊತೆ ಚರ್ಚಿಸಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಯೋಚಿಸುತ್ತಿದ್ದೇನೆ.” ಎಂದು ಶಾಸಕ ಎಂ.ಪಿ ರೇಣುಕಾಚಾರ್ಯ ಹೇಳಿದ್ದಾರೆ.

- Advertisement -

Latest News

error: Content is protected !!