ನವದೆಹಲಿ: ಕೋವಿಡ್ 19 ಸೋಂಕು ಹರಡುವ ಆತಂಕದ ನಡುವೆಯೇ ಇಂದಿನಿಂದ ಕರ್ನಾಟಕದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಹಲವು ಮುಂಜಾಗ್ರತಾ ಕ್ರಮಗಳೊಂದಿಗೆ ಆರಂಭವಾಗಿದೆ. ಪ್ರಸಕ್ತ ಶೈಕ್ಷಣಿಕ ವರ್ಷದ ವಿಶ್ವವಿದ್ಯಾಲಯಗಳ ಹಾಗೂ ಕಾಲೇಜುಗಳಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿಯ ಅಂತಿಮ ವರ್ಷದ ಪರೀಕ್ಷೆಯನ್ನು ರದ್ದುಪಡಿಸಲು ಯುಜಿಸಿ ಸಮಿತಿ (ಯೂನಿರ್ವಸಿಟಿ ಗ್ರ್ಯಾಂಟ್ ಕಮಿಷನ್) ಶಿಫಾರಸು ಮಾಡಿರುವುದಾಗಿ ವರದಿಯೊಂದು ತಿಳಿಸಿದೆ.
ದೇಶಾದ್ಯಂತ ಕೋವಿಡ್ 19 ಮಹಾಮಾರಿ ಅಟ್ಟಹಾಸ ಮುಂದುವರಿದಿರುವ ಹಿನ್ನೆಲೆಯಲ್ಲಿ ಯುಜಿಸಿ ಮುಖ್ಯವಾಗಿ ವಿವಿಯ ಅಂತಿಮ ವರ್ಷದ ವಿದ್ಯಾರ್ಥಿಗಳ ಸೆಮಿಸ್ಟರ್ ವಿಚಾರದಲ್ಲಿ ತನ್ನ ನಿಲುವನ್ನು ಬದಲಾಯಿಸಿಕೊಂಡಿರುವುದಾಗಿ ಹೇಳಿದೆ. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸುವುದು ಸಮಂಜಸವಲ್ಲ ಎಂದು ವಿದ್ಯಾರ್ಥಿಗಳು ಮತ್ತು ಪೋಷಕರು ಸುರಕ್ಷತೆಯ ದೃಷ್ಟಿಯಲ್ಲಿ ಆತಂಕ ವ್ಯಕ್ತಪಡಿಸಿದ್ದು, ಈ ನಿಟ್ಟಿನಲ್ಲಿ ಪರೀಕ್ಷೆ ರದ್ದುಪಡಿಸುವ ಬಗ್ಗೆ ಯುಜಿಸಿ ಸಮಿತಿ ಶಿಫಾರಸು ಮಾಡುವ ಸಾಧ್ಯತೆ ಇದೆ ಎಂದು ವರದಿ ಹೇಳಿದೆ.
ಕೊರೊನಾ ವೈರಸ್ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ದೇಶದಾದ್ಯಂತ ಯುಜಿಸಿ ಈಗಾಗಲೇ ಪದವಿ ಕಾಲೇಜುಗಳ ಪ್ರಥಮ ಹಾಗೂ ದ್ವಿತೀಯ ಪದವಿ ವಿದ್ಯಾರ್ಥಿಗಳಿಗೆ ಪರೀಕ್ಷೆಯನ್ನೇ ರದ್ದು ಮಾಡಿತ್ತು. ಆದರೆ ಅಂತಿಮ ವರ್ಷದ ಪದವಿ ಪರೀಕ್ಷೆಯನ್ನು ನಡೆಸುವುದಾಗಿ ಹೇಳಿತ್ತು. ಆದ್ರೀಗ ವೈರಸ್ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಸದ್ಯಕ್ಕೆ ಕಾಲೇಜುಗಳನ್ನು ಆರಂಭವುದು ಕೂಡ ಅಸಾಧ್ಯ.