ಮಂಗಳೂರು: ದಿನದಿಂದ ದಿನಕ್ಕೆ ದ.ಕ.ಜಿಲ್ಲೆಯ ಮಂಗಳೂರು ನಗರ ಮತ್ತು ಗ್ರಾಮಾಂತರ ಪ್ರದೇಶದಲ್ಲಿ ರಸ್ತೆ ಅಪಘಾತಗಳ ಸಂಖ್ಯೆಯು ಹೆಚ್ಚಾಗುತ್ತಿದೆ. ಅಪಘಾತಗಳಿಗೆ ಲಾಕ್ ಡೌನ್ ಸಂದರ್ಭದಲ್ಲಿ ಸಂಪೂರ್ಣ ಕಡಿವಾಣ ಬಿದ್ದಿದ್ದು, ಆದರೆ ಆನ್ ಲಾಕ್ ಆದ ಮೇಲೆ ಅಪಘಾತಗಳ ಸಂಖ್ಯೆ ತೀವ್ರ ವಾಗಿ ಹೆಚ್ಚಾಗಿದೆ.
ಓವರ್ಟೇಕ್ ಮತ್ತು ಅತಿಯಾದ ವೇಗ ಹಾಗೂ ನಿರ್ಲಕ್ಷ ಚಾಲನೆಯೇ ಅಪಘಾತಗಳಿಗೆ ಪ್ರಮುಖ ಕಾರಣ ಎಂದು ಸಂಚಾರ ಠಾಣೆಯ ಪೊಲೀಸರು ಅಭಿಪ್ರಾಯಪಡುತ್ತಾರೆ.ಅದರಲ್ಲೂ ದ್ವಿಚಕ್ರ ವಾಹನ ಸವಾರರು ಅಧಿಕ ಸಂಖ್ಯೆಯಲ್ಲಿ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ.
ಆಗಸ್ಟ್ ಮತ್ತು ಸೆಪ್ಟಂಬರ್ನಲ್ಲಿ ದ.ಕ. ಜಿಲ್ಲೆಯಲ್ಲಿ 40ಕ್ಕೂ ಅಧಿಕ ರಸ್ತೆ ಅಪಘಾತಗಳು ಸಂಭವಿಸಿವೆ. ಅದರಲ್ಲಿ 9 ಮಂದಿ ದ್ವಿಚಕ್ರ ವಾಹನ ಸವಾರರು ಹಾಗೂ ಸಹಸವಾರರು ಸಾವನ್ನಪ್ಪಿದ್ದಾರೆ. ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲೇ 5 ಮಂದಿ ದ್ವಿಚಕ್ರ ವಾಹನ ಸವಾರರು ಅಪಘಾತದಲ್ಲಿ ಮೃತಟ್ಟಿದ್ದಾರೆ.
ಹೆಲ್ಮೆಟ್ ಧರಿಸದಿರುವುದು,ಧರಿಸಿದರೂ ಲಾಕ್ ಮಾಡದಿರುವುದು. ವನ್ವೇ ರಸ್ತೆಯ ವಿರುದ್ಧ ದಿಕ್ಕಿನಲ್ಲಿ
ಸಂಚರಿಸುವುದು ಅದಲ್ಲದೆ ಅವೈಜ್ಞಾನಿಕ ರೀತಿಯಲ್ಲಿ ಹೊಂಡ-ಗುಂಡಿಗಳಿಂದ ಕೂಡಿದ ರಸ್ತೆಗಳು, ಸೂಚನಾ ಫಲಕ ಮತ್ತು ದಾರಿದೀಪಗಳಿಲ್ಲದ ರಸ್ತೆಗಳು, ಜಂಕ್ಷನ್ಗಳು ಮತ್ತು ಸರ್ವಿಸ್ ರಸ್ತೆಗಳಲ್ಲಿ ಸಂಚಾರ ಪೊಲೀಸರು ಇಲ್ಲದಿರುವುದು, ಚಾಲನೆಯ ವೇಳೆ ಮೊಬೆಲ್ ಬಳಕೆ ಮಾಡುವುದು, ಜಾಲಿ ರೈಡ್, ಮದ್ಯ ಸೇವಿಸಿ ಚಾಲನೆ ಮಾಡುವುದು ಕೂಡ ಅಪಘಾತಗಳಿಗೆ ಕಾರಣವಾಗುತ್ತಿದೆ.
ರಸ್ತೆ ಸುರಕ್ಷಾ ನಿಯಮಗಳನ್ನು ಪಾಲಿಸದಿರುವುದು ಅಪಘಾತಗಳಿಗೆ ಪ್ರಮುಖ ಕಾರಣವಾಗಿದೆ. ನಿಯಮ ಉಲ್ಲಂಘಿಸಿ ವಾಹನ ಚಲಾಯಿಸುವವರ ಮೇಲೆ ವಿಶೇಷ ನಿಗಾ ಇಡಲಾಗಿದೆ. ಈ ವಾರ ಟ್ರಾಫಿಕ್ ಡ್ರೈವ್ ಮೂಲಕ ನಿಯಮ ಉಲ್ಲಂಘಿಸುವ ಚಾಲಕರು/ಸವಾರರ ಸಹಿತ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ.