ಕೊಡಗು: ಇಲ್ಲಿನ ವಿರಾಜಪೇಟೆ ತಾಲೂಕಿನ ಸಿದ್ದಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ಮೇಕೂರು ಹೊಸ್ಕೇರಿ ಗ್ರಾಮದ ಕೂತಂಡ ಸುಬ್ಬಯ್ಯ ಎಂಬವರ ಮನೆಯಲ್ಲಿ ನಡೆದಿದ್ದ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ಮಡಿಕೇರಿ ನಗರ ವೃತ್ತ ಮತ್ತು ಡಿಸಿಆರ್ಬಿ ಘಟಕದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿ ಯಶಸ್ವಿಯಾಗಿದ್ದಾರೆ.
ದಿನಾಂಕ: 12-06-2022 ರಂದು ವಿರಾಜಪೇಟೆ ತಾಲ್ಲೂಕು ಮೇಕೂರು ಹೊಸ್ಕೇರಿ ಗ್ರಾಮದ ನಿವಾಸಿ ಸುಬ್ಬಯ್ಯ ಎಂಬುವವರ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಯಾರೋ ಕಳ್ಳರು ಮುಂಬಾಗಿಲಿನ ಬೀಗವನ್ನು ಮುರಿದು ಒಳನುಗ್ಗಿ ಮನೆಯೊಳಗೆ ಪೆಟ್ಟಿಗೆಯಲ್ಲಿ ಇಟ್ಟಿದ್ದ ಒಟ್ಟು ಅಂದಾಜು ₹. 9 ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು ಕಳವು ಮಾಡಿಕೊಂಡು ಹೋಗಿದ್ದರು. ಈ ಬಗ್ಗೆ ನೀಡಿದ ಪುಕಾರಿನ ಮೇರೆ ಸಿದ್ದಾಪುರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮಡಿಕೇರಿ ನಗರ ವೃತ್ತ ನಿರೀಕ್ಷಕರು ಮತ್ತು ಡಿ.ಸಿ.ಆರ್.ಬಿ ವಿಭಾಗದ ಪೊಲೀಸ್ ನಿರೀಕ್ಷಕರ ನೇತೃತ್ವದಲ್ಲಿ ತನಿಖೆ ಕೈಗೊಂಡಿದ್ದರು.
ಅದರಂತೆ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿಗಳಾದ ಕುರ್ಬನ್ ಆಲಿ, ಮಹಿರುದ್ದೀನ್ ಆಲಿ ಎಂಬವರನ್ನು ಬಂಧಿಸಿದ್ದಾರೆ. ಇನ್ನಿಬ್ಬರು ಆರೋಪಿಗಳಾದ ಸಫಿಕೂಲ್ ಇಸ್ಲಾಂ , ಮೊಹಿಬುಲ್ ಇಸ್ಲಾಂ ಎಂಬಿಬ್ಬರು ತಲೆ ಮರೆಸಿಕೊಂಡಿದ್ದಾರೆ. ಬಂಧಿತರಿಂದ ಒಟ್ಟು ₹. 11,70,000 ಮೌಲ್ಯದ ಚಿನ್ನಾಭರಣ ವಶಪಡಿಸಿಕೊಳ್ಳಲಾಗಿದೆ.