ಬಳ್ಳಾರಿ: ರೌಡಿಶೀಟರ್ ಓರ್ವನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಬಳ್ಳಾರಿ ನಗರದ ಹಾವಂಭಾವಿ ಪ್ರದೇಶದಲ್ಲಿ ಭಾನುವಾರ ರಾತ್ರಿ ನಡೆದಿದೆ.
ಮಹೇಂದ್ರ (34) ಕೊಲೆಯಾದ ವ್ಯಕ್ತಿ. ಈತ ತಾಂಡಾ ರಮೇಶ ಎಂಬಾತನ ಕೊಲೆ ಪ್ರಕರಣದ ಆರೋಪಿಯಾಗಿದ್ದು, ಇತ್ತಿಚೆಗಷ್ಟೇ ಜೈಲಿನಿಂದ ಹೊರ ಬಂದಿದ್ದ. ಈ ಹಿಂದೆ ಮೂರು ಬಾರಿ ಮಹೇಂದ್ರನ ಕೊಲೆ ಪ್ರಯತ್ನ ನಡೆದಿತ್ತು. ಆದರೆ, ಭಾನುವಾರ ರಾತ್ರಿ ಮನೆಗೆ ತೆರಳುತ್ತಿದ್ದವೇಳೆ ಹಾವಂಭಾವಿ ಪ್ರದೇಶದಲ್ಲಿ ಮಹೇಂದ್ರನನ್ನು ಅಡ್ಡಗಟ್ಟಿದ 20ಕ್ಕೂ ಹೆಚ್ಚು ದುಷ್ಕರ್ಮಿಗಳು, ಏಕಾಏಕಿ ಮಾರಕಾಸ್ತ್ರಗಳಿಂದ ದಾಳಿ ಮಾಡಿ ಭೀಕರವಾಗಿ ಹತ್ಯೆಗೈದು ಪರಾರಿಯಾಗಿದ್ದಾರೆ.
ಹಳೆ ದ್ವೇಷ, ಜೊತೆ ಹುಡುಗಿ ವಿಚಾರಕ್ಕೆ ಸಂಬಂಧಿಸಿದಂತೆ ಗಲಾಟೆ ಆಗಿದ್ದೇ ಹತ್ಯೆಗೆ ಕಾರಣ ಎನ್ನಲಾಗುತ್ತಿದೆ. ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೈದುಲು ಅದಾವತ್ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ಈ ಕುರಿತು ಬಳ್ಳಾರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ನಡೆದಿದೆ.