ಪುತ್ತೂರು: ಫೆ.11ರಂದು ಪುತ್ತೂರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮಿಸುತ್ತಿರುವ ಹಿನ್ನೆಲೆ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸುನಿಲ್ ಕುಮಾರ್ ಹಾಗೂ ಬಂದರು ಮತ್ತು ಮೀನುಗಾರಿಕೆ ಸಚಿವರಾದ ಎಸ್.ಅಂಗಾರ ಅವರು ತೆಂಕಿಲ ಮೈದಾನಕ್ಕೆ ಆಗಮಿಸಿ ಸಿದ್ಧತೆಗಳನ್ನು ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಮಾದ್ಯಮದೊಂದಿಗೆ ಮಾತನಾಡಿದ ಸಚಿವ ಸುನಿಲ್ ಕುಮಾರ್ ಅವರು ಫೆ. 11ರಂದು ಐತಿಹಾಸಿಕವಾದ ಸಹಕಾರಿ ಮತ್ತು ರೈತ ಸಮ್ಮೇಳನ ಇಲ್ಲಿ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಹಾಗೂ ಸಹಕಾರಿ ಸಚಿವ ಅಮಿತ್ ಶಾ ಅವರು ಭಾಗವಹಿಸಲಿರುವುದರಿಂದ ಇಲ್ಲಿ ದೊಡ್ಡ ಪ್ರಮಾಣದ ಸಮಾವೇಶ ನಡೆಯಲಿದೆ. ಸಮಾವೇಶದಲ್ಲಿ 75 ಸಾವಿರದಿಂದ 1 ಲಕ್ಷ ಮಂದಿ ಭಾಗವಹಿಸುವ ನಿರೀಕ್ಷೆಯಿದೆ. ಅಮಿತ್ ಶಾ ಅವರ ಆಗಮನವು ಮುಂದಿನ ಚುನಾವಣೆಯ ದೃಷ್ಠಿಯಿಂದಲೂ ಕಾರ್ಯಕರ್ತರಲ್ಲಿ ಹುರುಪು ಮೂಡಿಸಲಿದೆ. ಇದೊಂದು ಐತಿಹಾಸಿಕ ಸಮ್ಮೇಳನವಾಗಿ ಮೂಡಿ ಬರಲಿದೆ ಎಂದರು.
ಪುತ್ತೂರು ಶಾಸಕ ಸಂಜೀವ ಮಠಂದೂರು, ನಗರಸಭಾ ಅಧ್ಯಕ್ಷ ಕೆ. ಜೀವಂಧರ್ ಜೈನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಮ ಅಮಟೆ, ಸೇರಿದಂತೆ ಅನೇಕ ಅಧಿಕಾರಿಗಳು ಈ ವೇಳೆ ಉಪಸ್ಥಿತರಿದ್ದರು.