ಬೆಂಗಳೂರು: ರಾಜ್ಯದಲ್ಲಿ ಕ್ರಿಮಿನಲ್ ಗಳು ಪೊಲೀಸರ ಬದಲಾಗಿ ಸಾರ್ವಜನಿಕರಿಂದ ಅರೆಸ್ಟ್ ಆಗಬೇಕಾದ ಪರಿಸ್ಥಿತಿ ಇದೆ ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಇಂದು ಕಾನೂನು ಮತ್ತು ಸುವ್ಯವಸ್ಥೆ ಕುರಿತಾಗಿ ರಾಜ್ಯ ಪೊಲೀಸ್ ಮಹಾ ನಿರ್ದೇಶಕರನ್ನು ಭೇಟಿ ಮಾಡಿದ ಬಳಿಕ ಮಾತನಾಡಿದ ಸದಾನಂದ ಗೌಡ, ಪೊಲೀಸ್ ಇಲಾಖೆ ಕಾಂಗ್ರೆಸ್ ಕೃಪಾ ಪೋಷಿತ ನಾಟಕ ಕಂಪನಿ ಅಂತಾ ಜನ ಮಾತನಾಡಲಾರಂಭಿಸಿದ್ದಾರೆ ಎಂದು ಟೀಕಿಸಿದ್ದಾರೆ.
ಅಲ್ಲದೇ, ರಾಜ್ಯದಲ್ಲಿ ಯಾರೂ ಮನೆ ಬಿಟ್ಟು ಹೊರಗೆ ಬರದಿರುವ ಪರಿಸ್ಥಿತಿ ನಿರ್ಮಾಣವಾಗಿದ್ದು, ಕ್ರಿಮಿನಲ್ ಗಳು ರಾಜಾರೋಷವಾಗಿ ತಮ್ಮ ಕೆಲಸ ಮಾಡುತ್ತಿದ್ದಾರೆ ಎಂದು ಡಿವಿಎಸ್ ಆರೋಪಿಸಿದ್ದಾರೆ.
ಅಲ್ಲದೇ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ನಿರ್ದೇಶನದ ಮೇಲೆ ಪೊಲೀಸ್ ಇಲಾಖೆ ನಡೆಯುತ್ತಿದ್ದು, ಏನಾದರೂ ಬಿಜೆಪಿ ಕಾರ್ಯಕರ್ತರು ಎಲ್ಲರೂ ಬೀದಿಗೆ ಇಳಿದು ಅವರಿಗೆ ಸಾರ್ವಜನಿಕರು ಬೆಂಬಲ ಕೊಟ್ಟರೆ ಪರಿಸ್ಥಿತಿ ಏನಾಗಬಹುದು ಅಂತಾ ಆಲೋಚಿಸಲೂ ಸಾಧ್ಯವಿಲ್ಲ ಎಂದೂ ಸದಾನಂದ ಗೌಡ ಎಚ್ಚರಿಸಿದ್ದಾರೆ.
ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಕ್ರಮ ಕೈಗೊಳ್ಳುವಂತೆ ಡಿ.ವಿ. ಸದಾನಂದ ಗೌಡ ನೇತೃತ್ವದಲ್ಲಿ ಬಿಜೆಪಿ ನಿಯೋಗದಿಂದ ಇಂದು ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಮನವಿ ಸಲ್ಲಿಸಲಾಗಿತ್ತು.