Monday, June 30, 2025
Homeಕರಾವಳಿಉಡುಪಿರಾಜ್ಯದಲ್ಲಿ ಈ ವರ್ಷ 220 ಸಲ ಸ್ಯಾಟಲೈಟ್ ಫೋನ್ ಬಳಕೆ:ಗೃಹ ಸಚಿವ ಆರಗ ಜ್ಞಾನೇಂದ್ರ

ರಾಜ್ಯದಲ್ಲಿ ಈ ವರ್ಷ 220 ಸಲ ಸ್ಯಾಟಲೈಟ್ ಫೋನ್ ಬಳಕೆ:ಗೃಹ ಸಚಿವ ಆರಗ ಜ್ಞಾನೇಂದ್ರ

spot_img
- Advertisement -
- Advertisement -

ಬೆಂಗಳೂರು: ರಾಜ್ಯದಲ್ಲಿ ಪ್ರಸಕ್ತ ವರ್ಷದಲ್ಲಿ 220 ಬಾರಿ ನಿಷೇಧಿತ ಸ್ಯಾಟಲೈಟ್‌ ಫೋನ್‌ ಬಳಕೆಯಾಗಿದೆ ಎಂಬ ಆತಂಕಕಾರಿ ಮಾಹಿತಿಯನ್ನು ಗೃಹ ಸಚಿವ ಆರಗ ಜ್ಞಾನೇಂದ್ರ ವಿಧಾನಸಭೆಯಲ್ಲಿ ಬಹಿರಂಗಪಡಿಸಿದ್ದಾರೆ.

2020ರಿಂದ ಈವರೆಗೂ ರಾಜ್ಯ ಪೊಲೀಸರು ಹಾಗೂ ಕೇಂದ್ರಿಯಾ ತನಿಖಾ ಸಂಸ್ಥೆಗಳಿಂದ ರಾಜ್ಯದಲ್ಲಿ 476 ಬಾರಿ ನಿಷೇಧಿತ ಸ್ಯಾಟಲೈಟ್ ಫೋನ್ ಗಳ ಬಳಕೆಯಾಗಿರುವುದನ್ನು ಪತ್ತೆ ಮಾಡಿವೆ ಎಂದಿದ್ದಾರೆ.

ವಿಧಾನಸಭೆ ಶೂನ್ಯ ವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಅವರು, ಕರಾವಳಿಯಲ್ಲಿ ಪದೇ ಪದೇ ಸ್ಯಾಟಲೈಟ್ ಫೋನ್ ಬಳಕೆ ಮಾಡಲಾಗುತ್ತಿದೆ ಎಂದು ಸುದ್ದಿಗಳು ಬಿತ್ತರವಾಗುತ್ತಿದ್ದು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ ಸೇರಿದಂತೆ ಕರಾವಳಿ ಭಾಗದಲ್ಲಿ ಜನರು ಗೊಂದಲದಲ್ಲಿದ್ದಾರೆ. ಈ ಕುರಿತು ತನಿಖೆ ನಡೆಸಿ ಸರಕಾರ ಅಧಿಕೃತ ಹೇಳಿಕೆಯನ್ನು ನೀಡಬೇಕು. ಅಲ್ಲದೆ ವರ್ಷದ ಹಿಂದೆಯೂ ಸ್ಯಾಟ್‍ಲೈಟ್ ಫೋನ್ ಸುದ್ದಿಯಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಯುವಕನೊಬ್ಬನ ಮೇಲೆ ವಿನಾಕಾರಣ ಆರೋಪ ಮಾಡಲಾಗಿತ್ತು. ಆದರೆ, ಪರಿಶೀಲನೆ ನಡೆಸಿದರೆ ಆ ಆರೋಪ ಸುಳ್ಳಾಗಿತ್ತು ಎಂದು ಖಾದರ್ ಹೇಳಿದ್ದಾರೆ.

ಇನ್ನು ಗೃಹ ಸಚಿವ ಆರಗ ಜ್ಞಾನೇಂದ್ರ ಖಾದರ್ ಅವರ ಪ್ರಸ್ತಾಪಕ್ಕೆ ಪ್ರತಿಕ್ರಿಯೆ ನೀಡಿದ್ದು, ರಾಜ್ಯದ ಕರಾವಳಿ ಭಾಗದಲ್ಲಿ ಸ್ಯಾಟಲೈಟ್ ಫೋನ್ ಬಳಕೆ ಬಗ್ಗೆ ಮಾಧ್ಯಮಗಳ ವರದಿ ಗಮನಿಸಿದ್ದೇನೆ. ದೇಶದ ಸುರಕ್ಷತೆಯ ದೃಷ್ಟಿಯಿಂದ ಸ್ಯಾಟಲೈಟ್ ಪೋನ್ ಬಳಕೆ ದೇಶದಲ್ಲಿ ನಿಷೇಧಿಸಲಾಗಿದೆ. ಆದರೂ ಅಲ್ಲಲ್ಲಿ ಬಳಕೆ ಆಗುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆ ಎಂದು ಸ್ಪಷ್ಟಪಡಿಸಿದರು.

ರಾಜ್ಯದಲ್ಲಿ ಸ್ಯಾಟಲೈಟ್ ಫೋನ್ ಬಳಕೆ ನಿಷೇಧ ಮಾಡಲಾಗಿತ್ತಾದರೂ, ರಾಜ್ಯದಲ್ಲಿ ಕಳೆದ 2020ರಲ್ಲಿ 256 ಮತ್ತು 2021ರಲ್ಲಿ 220 ಕರೆಗಳಲ್ಲಿ ಸ್ಯಾಟಲೈಟ್ ಫೋನ್ ಬಳಕೆ ಮಾಡುವುದು ಪತ್ತೆ ಮಾಡಲಾಗಿದೆ. ಕೇಂದ್ರ ಗುಪ್ತಚರ ಇಲಾಖೆ ಜೊತೆ ಸಂಪರ್ಕದಲ್ಲಿದ್ದು, ಮಾಹಿತಿ ವಿನಿಮಯ ಮಾಡಿಕೊಳ್ಳಲಾಗುತ್ತಿದೆ. ದೇಶದ ಭದ್ರತೆ ವಿಷಯವೂ ಇದಾಗಿದ್ದು ಹೆಚ್ಚಿನ ಮಾಹಿತಿ ಹಂಚಿಕೊಳ್ಳಲು ಸಾಧ್ಯವಿಲ್ಲ. ಆದರೆ, ಆತಂಕಪಡುವ ಅಗತ್ಯವಿಲ್ಲ. ಮೂಲ ಪತ್ತೆಹಚ್ಚುವ ಕೆಲಸ ಮಾಡಲಾಗುವುದು ಎಂದಿದ್ದಾರೆ.

ಕೇಂದ್ರ ಸರ್ಕಾರದ ಏಜೆನ್ಸಿಗಳಾಗ ಸಂಶೋಧನಾ ಮತ್ತು ವಿಶ್ಲೇಷಣಾ ದಳ (ರಾ), ಗುಪ್ತಚರ ದಳದಂತಹ (ಐಬಿ) ಸಂಸ್ಥೆಗಳು ನೀಡುವ ಮಾಹಿತಿ ಅವಲೋಕಿಸಿ ಸ್ಥಳೀಯ ಪೊಲೀಸರು ತನಿಖೆ ಕೈಗೊಳ್ಳುತ್ತಾರೆ. ಕೇಂದ್ರ ತನಿಖಾ ಸಂಸ್ಥೆಗಳೊಂದಿಗೆ ಸಂಪೂರ್ಣ ಸಹಕಾರ ನೀಡುತ್ತಿದ್ದೇವೆ. ಈ ಬಗ್ಗೆ ಹೆಚ್ಚಿಗೆ ಹೇಳಲು ಸಾಧ್ಯವಿಲ್ಲ ಎಂದಷ್ಟೇ ಹೇಳಿದರು.

- Advertisement -
spot_img

Latest News

error: Content is protected !!