ಬೆಂಗಳೂರು: ಎಸ್ ಸಿ ಮತ್ತು ಎಸ್ ಟಿ ವರ್ಗದವರಿಗಾಗಿ ಭೂ ಒಡೆತನ ಯೋಜನೆಯಡಿ ನೀಡಲಾಗುತ್ತಿದ್ದ 15 ಲಕ್ಷ ರೂಪಾಯಿ ಸಹಾಯಧನವನ್ನು 20 ಲಕ್ಷ ರೂಪಾಯಿಗೆ ಹೆಚ್ಚಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಇಂದು ಮಾಜಿ ಉಪ ಪ್ರಧಾನಿ ಡಾ. ಬಾಬು ಜಗಜೀವನ್ ರಾಮ್ ರವರ 115ನೇ ಜನ್ಮದಿನಾಚರಣೆ ಹಾಗೂ ಬಾಬು ಜಗಜೀವನ ರಾಂ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು. ಎಸ್ಸಿ ಎಸ್ಟಿ ಸಮುದಾಯದವರು ಮನೆ ನಿರ್ಮಾಣಕ್ಕಾಗಿ ನೀಡಲಾಗುತ್ತಿದ್ದ 1,75,000 ರೂ.ಗಳ ಸಹಾಯಧನವನ್ನು 2 ಲಕ್ಷ ರೂ.ಗಳಿಗೆ ಹೆಚ್ಚಿಸಲು ತೀರ್ಮಾನಿಸಲಾಗಿದೆ ಎಂದು ಸಿಎಂ ಹೇಳಿದ್ದಾರೆ.
ಇನ್ನು ಸ್ವಯಂ ಉದ್ಯೋಗ ಮಾಡುವ ಎಸ್ಸಿ ಎಸ್ಟಿ ಸಮುದಾಯಕ್ಕೆ ಪ್ರತಿ ತಾಲ್ಲೂಕಿನಲ್ಲಿ ಬಾಬು ಜಗಜೀವರಾಂ ಸ್ವಯಂ ಉದ್ಯೋಗ ಯೋಜನೆಯನ್ನು ತರಲು ತೀರ್ಮಾನಿಸಲಾಗಿದ್ದು, ಈ ಯೋಜನೆಯ ರೂಪುರೇಷೆಯನ್ನು ಸಿದ್ಧಪಡಿಸಿ ಕೂಡಲೇ ಒಂದು ತಿಂಗಳ ಯೋಜನೆಯನ್ನು ಜಾರಿಗೆ ತರಲಾಗುವುದು ಎಂದು ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಗ್ರಾಮೀಣ ಪ್ರದೇಶದಲ್ಲಿ ಕುಟೀರ ಯೋಜನೆಯಡಿ ಎಸ್ ಸಿ ಎಸ್ಟಿ ಸಮುದಾಯದವರಿಗೆ 75 ಯೂನಿಟ್ ವರೆಗೆ ಉಚಿತ ವಿದ್ಯುತ್ ನೀಡಲು ತೀರ್ಮಾನಿಸಲಾಗಿದ್ದು ಮುಂದಿನ ವಾರದೊಳಗಾಗಿ ಸರ್ಕಾರಿ ಆದೇಶವನ್ನು ಹೊರಡಿಸಲಾಗುವುದು ಎಂದು ಸಿಎಂ ತಿಳಿಸಿದ್ದಾರೆ.
ಇದಲ್ಲದೇ ಎಸ್ ಸಿ ಎಸ್ ಟಿ ವಿದ್ಯಾರ್ಥಿಗಳಿಗೆ ವಸತಿ ಶಾಲೆಗಳಲ್ಲಿ ವಿಶೇಷ ತರಬೇತಿ ನೀಡುವ ವಿನೂತನ ಯೋಜನೆಯನ್ನು ಈ ವರ್ಷ ಪ್ರಾರಂಭ ಮಾಡಲಾಗುವುದು. ಮುಖ್ಯಮಂತ್ರಿ ಮಾರ್ಗದರ್ಶಿನಿ ವೇದಿಕೆಯ ಮೂಲಕ 8 ರಿಂದ 12 ನೇ ತರಗತಿಯ ವಿದ್ಯಾರ್ಥಿಗಳಿಗೆ ವಿಶೇಷ ತರಬೇತಿ ನೀಡುವ ವಿಶೇಷ ಕಾರ್ಯಕ್ರಮವನ್ನು ರೂಪಿಸಲಾಗುವುದು ಎಂದೂ ಮುಖ್ಯಮಂತ್ರಿ ಬೊಮ್ಮಾಯಿ ಹೇಳಿದ್ದಾರೆ.