
ಮಂಗಳೂರು: ಸಹಕಾರಿ ಪಿತಾಮಹ ದಿ. ಮೊಳಹಳ್ಳಿ ಶಿವರಾವ್ ಅವರ ಸ್ಮರಣಾರ್ಥವಾಗಿ ಎಸ್ಸಿಡಿಸಿಸಿ ಬ್ಯಾಂಕ್ ಹಮ್ಮಿಕೊಂಡಿರುವ ಪ್ರತಿಭಾ ಪುರಸ್ಕಾರ ಮತ್ತು ವಿದ್ಯಾರ್ಥಿವೇತನ ವಿತರಣಾ ಸಮಾರಂಭವು ಜುಲೈ 4ರಂದು ಅಪರಾಹ್ನ 3 ಗಂಟೆಗೆ ಬ್ಯಾಂಕಿನ ಪ್ರಧಾನ ಕಚೇರಿಯ ಮೊಳಹಳ್ಳಿ ಶಿವರಾವ್ ಸಭಾಭವನದಲ್ಲಿ ನಡೆಯಲಿದೆ.
2025-2026ನೇ ಸಾಲಿನಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಹತ್ತನೇ ತರಗತಿ ಮತ್ತು ಪಿಯುಸಿ ಪರೀಕ್ಷೆಗಳಲ್ಲಿ ಅತ್ಯಧಿಕ ಅಂಕ ಗಳಿಸಿದ ಸಾಧಕ ವಿದ್ಯಾರ್ಥಿಗಳಿಗೆ ಈ ಸಮಾರಂಭದಲ್ಲಿ ಪ್ರತಿಭಾ ಪುರಸ್ಕಾರ ನೀಡಿ ಸನ್ಮಾನಿಸಲಾಗುವುದು. ಇದೇ ವೇಳೆ ಬ್ಯಾಂಕಿನ ಸಿಬ್ಬಂದಿಗಳ ಮಕ್ಕಳ ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿವೇತನವನ್ನೂ ಸಹ ವಿತರಿಸಲಾಗುವುದು.
ಮಾಜಿ ಸಚಿವ ಹಾಗೂ ವಿಕಾಸ್ ಎಜ್ಯುಕೇಶನ್ ಟ್ರಸ್ಟ್ ಸಂಸ್ಥಾಪಕರಾದ ಕೃಷ್ಣ ಜೆ. ಪಾಲೇಮಾರ್ ಅವರು ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವ ಪುರಸ್ಕಾರ ನೆರವೇರಿಸಲಿದ್ದು, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಮತ್ತು ಎಸ್ಸಿಡಿಸಿಸಿ ಬ್ಯಾಂಕಿನ ಅಧ್ಯಕ್ಷರಾದ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಬ್ಯಾಂಕಿನ ಪ್ರಕಟಣೆ ತಿಳಿಸಿದೆ.


