ಬೆಂಗಳೂರು: ದೇಶದಲ್ಲಿಯೇ ಮೊಟ್ಟಮೊದಲ ಬಾರಿಗೆ ಕರ್ನಾಟಕದಲ್ಲಿ ಅಪರಾಧ ಕೃತ್ಯಗಳ ತನಿಖೆಗೆ ಹೊಸ ಪೊಲೀಸ್ ಹುದ್ದೆಗಳನ್ನು ಸೃಷ್ಟಿ ಮಾಡಲಾಗಿದೆ. ಅಪರಾಧ ಕೃತ್ಯ ನಡೆದ ಸ್ಥಳವನ್ನು ವೈಜ್ಞಾನಿಕವಾಗಿ ಪರಿಶೀಲನೆ ನಡೆಸಿ, ಸೂಕ್ಷ್ಮಾತಿಸೂಕ್ಷ್ಮ ಸಾಕ್ಷಾಧಾರಗಳನ್ನು ಸಂಗ್ರಹಿಸಿ ಅಪರಾಧವನ್ನು ಪತ್ತೆ ಮಾಡಲು ದೇಶದಲ್ಲಿಯೇ ಮೊಟ್ಟ ಮೊದಲ ನುರಿತ ಹಾಗೂ ಪರಿಣಿತರ ‘ಕೃತ್ಯ ಸ್ಥಳ ಪರಿಶೀಲನಾ ಅಧಿಕಾರಿ’ ಹುದ್ದೆಯನ್ನು ಸೃಷ್ಟಿ ಮಾಡಲಾಗಿದೆ. ಜುಲೈ 13ರಂದು ಮಂಗಳವಾರ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿಧಾನಸೌಧದಲ್ಲಿ ಹೊಸ ಹುದ್ದೆಗಳ ಆದೇಶ ಪ್ರತಿಯನ್ನು ಗೃಹ ಇಲಾಖೆಗೆ ಹಸ್ತಾಂತರಿಸಲಿದ್ದಾರೆ.
ಯಾವುದಾದರೂ ಒಂದು ಅಪರಾಧ ಕೃತ್ಯ ನಡೆದ ತಕ್ಷಣ ಘಟನಾ ಸ್ಥಳಕ್ಕೆ ಹೋಗಿ ಇಲ್ಲಿರುವಂತಹ ಸಾಕ್ಷಾಧಾರಗಳನ್ನು ವೈಜ್ಞಾನಿಕವಾಗಿ, ಸುರಕ್ಷಿತವಾಗಿ ಸಂರಕ್ಷಣೆ ಮಾಡಲು ಈ ವಿಶೇಷ ಅಧಿಕಾರಿಗಳನ್ನು ನೇಮಿಸಲಾಗಿದೆ. ಇದುವರೆಗೆ ಈ ಕೆಲಸವನ್ನು ಸ್ಥಳೀಯ ಅಧಿಕಾರಿಗಳು ಮಾಡುತ್ತಿದ್ದರು. ಆದರೆ ಇನ್ನು ಮುಂದೆ ಮೊದಲ ಹಂತದಲ್ಲಿ ಗಂಭೀರ ಸ್ವರೂಪದ ಅಪರಾಧಗಳಲ್ಲಿ ವಿಧಿವಿಜ್ಞಾನ ಪ್ರಯೋಗಾಲಯ ದಲ್ಲಿ ವಿಶೇಷ ತರಬೇತಿ ಪಡೆದ ಈ ತಂಡ ಅಪರಾಧ ಕೃತ್ಯ ನಡೆದ ಸ್ಥಳಕ್ಕೆ ಮೊದಲು ಭೇಟಿ ನೀಡಲಿದೆ.
ಆ ಸ್ಥಳದಲ್ಲಿನ ಎಲ್ಲ ಸಾಕ್ಷಾಧಾರಗಳನ್ನು ಸಂರಕ್ಷಣೆ ಮಾಡುವುದು, ಆನಂತರ ಸಾಕ್ಷಾಧಾರಗಳನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಸುರಕ್ಷಿತವಾಗಿ ಕಳುಹಿಸಿಕೊಡುವುದು, ತನಿಖಾಧಿಕಾರಿಗೆ ಆ ಸಾಕ್ಷಾಧಾರಗಳನ್ನು ಒದಗಿಸುವುದು ಸೇರಿದಂತೆ ಇತರ ಅವಶ್ಯ ಕರ್ತವ್ಯಗಳನ್ನು ಮಾಡುತ್ತಾ ಅಪರಾಧಿಗಳನ್ನು ಅತ್ಯಂತ ಶ್ರೀಘ್ರದಲ್ಲಿ ಪತ್ತೆ ಮಾಡಲು ಮೂಲಭೂತವಾಗಿ ಬೇಕಾಗುವ ಎಲ್ಲ ಕೆಲಸ ಕಾರ್ಯಗಳನ್ನು ಈ ಅಧಿಕಾರಿಗಳು ಮಾಡುತ್ತಾರೆ. ಇದರಿಂದ ಅಪರಾಧಿಗಳ ಪತ್ತೆ ಮತ್ತು ಅಪರಾಧ ನಿಯಂತ್ರಣ ಸಾಧ್ಯ. ಈ ವ್ಯವಸ್ಥೆಯ ಪ್ರಮುಖವಾಗಿ ವಿದೇಶಗಳಲ್ಲಿ ಹೆಚ್ಚಾಗಿ ಇದೆ.