ಮಂಗಳೂರು: ಹಿರಿಯ ವಿದ್ವಾಂಸ, ಉಡುಪಿ, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಜಿಲ್ಲೆಗಳ ಸಯುಕ್ತ ಖಾಝಿ ಅಲ್ಹಾಜ್ ಪಿ.ಎಂ. ಇಬ್ರಾಹೀಂ ಮುಸ್ಲಿಯಾರ್ ಬೇಕಲ್ (71) ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ ನಿಧನರಾಗಿದ್ದು, ಮೃತದೇಹವನ್ನು ಮೊಂಟೆಪದವಿನ ಮನೆಯಲ್ಲಿ ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ಇಡಲಾಗಿದೆ.
ಸುನ್ನಿ ಜಂಇಯ್ಯತುಲ್ ಉಲಮಾದ ರಾಜ್ಯಾಧ್ಯಕ್ಷರಾಗಿದ್ದ ಬೇಕಲ್ ಉಸ್ತಾದ್ ಅವರು ಜಾಮಿಯಾ ಸಅದಿಯಾ ಅರಬಿಯಾ ಶರೀಅತ್ ಕಾಲೇಜಿನ ಪ್ರಾಚಾರ್ಯರು, ಸಮಸ್ತ ಉಲಮಾ ಒಕ್ಕೂಟದ ಕೇಂದ್ರ ಮುಶಾವರ ಸದಸ್ಯರಾಗಿ ಅಲ್ ಅನ್ಸಾರ್ ಪತ್ರಿಕೆಯ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು.
ದೇವಬಂದ್ ಅರಬಿಕ್ ಕಾಲೇಜಿನಿಂದ ಪದವಿ ಪಡೆದಿದ್ದ ಅವರು, ಸೂರಿಂಜೆ ಮತ್ತು ಬಂಟ್ವಾಳದ ಜುಮಾ ಮಸೀದಿಗಳಲ್ಲಿ ತಲಾ ಎರಡು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. ಬಳಿಕ ಸುದೀರ್ಘ 43 ವರ್ಷಗಳಿಂದ ಬೇಕಲದಲ್ಲಿ ಮುದರ್ರಿಸ್ ಆಗಿ ಸೇವೆ ಸಲ್ಲಿಸುವ ಮೂಲಕ ‘ಬೇಕಲ್ ಉಸ್ತಾದ್’ ಎಂದೇ ಜನಪ್ರಿಯರಾಗಿದ್ದರು.
ಮೃತರು ಪತ್ನಿ, ಮೂವರು ಪುತ್ರರು, ಇಬ್ಬರು ಪುತ್ರಿಯರ ಸಹಿತ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಅಂತ್ಯಸಂಸ್ಕಾರವು ಮೊಂಟೆಪದವು ಸಮೀಪದ ಮರಿಕ್ಕಳ ಜುಮಾ ಮಸೀದಿಯ ವಠಾರದಲ್ಲಿ ಇಂದು ಸಂಜೆ 6 ಗಂಟೆಗೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.