ಮಂಗಳೂರು: ಗಲಭೆಕೋರರ ವಿರುದ್ಧದ ಪ್ರಕರಣಗಳನ್ನು ಹಿಂಪಡೆಯುವ ಸರ್ಕಾರದ ಕ್ರಮವನ್ನು ಖಂಡಿಸಿ ಹಾಗೂ ಗೋ ರಕ್ಷಣೆಯ ಹೆಸರಿನಲ್ಲಿ ನಡೆಯುತ್ತಿರುವ ದೌರ್ಜನ್ಯಗಳ ವಿರುದ್ಧ SDPI ಮಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲಾ ಸಮಿತಿಗಳ ವತಿಯಿಂದ ಇಂದು ಕ್ಲಾಕ್ ಟವರ್ ಬಳಿ ಪ್ರತಿಭಟನೆ ನಡೆಯಿತು.
ಗಲಭೆಕೋರರ ಕೇಸ್ ವಾಪಸ್ ಪಡೆಯುವ ಮೂಲಕ ಸರ್ಕಾರ ಅಶಾಂತಿ ಸೃಷ್ಟಿಸುವ ಶಕ್ತಿಗಳಿಗೆ ಉತ್ತೇಜನ ನೀಡುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಪ್ರತಿಭಟನೆಯಲ್ಲಿ ಮಾತನಾಡಿದ ಗ್ರಾಮಾಂತರ ಜಿಲ್ಲಾಧ್ಯಕ್ಷ ಅನ್ವರ್ ಸಾದತ್ ಬಜತ್ತೂರು, ಕನ್ನಡ ಪರ ಹೋರಾಟಗಾರರ ಕೇಸ್ ವಾಪಸ್ ಪಡೆದಿರುವುದು ಸ್ವಾಗತಾರ್ಹ. ಆದರೆ, ದ್ವೇಷ ಭಾಷಣ ಮಾಡುವ ಪ್ರಮೋದ್ ಮುತಾಲಿಕ್, ಚೈತ್ರ ಕುಂದಾಪುರ ಅವರ ಮೇಲಿನ ಪ್ರಕರಣಗಳನ್ನು ಕೈಬಿಟ್ಟಿರುವುದು ದುರದೃಷ್ಟಕರ ಎಂದರು. ಇದೇ ವೇಳೆ, ಟಿಪ್ಪು ಜಯಂತಿ, ಹಿಜಾಬ್ ಹಾಗೂ ಮೀಸಲಾತಿ ಪರ ಹೋರಾಡಿದ ಅಮಾಯಕರ ಮೇಲಿನ ಪ್ರಕರಣಗಳನ್ನು ಸರ್ಕಾರ ಯಾಕೆ ಹಿಂಪಡೆದಿಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.


