ಮಂಗಳೂರು: ಪೊಲೀಸ್ ಕಮಿಷನರ್ ಎನ್ ಶಶಿಕುಮಾರ್ ಅವರು ಇಂದು ಬೆಳಿಗ್ಗೆ 6 ರಿಂದ ಫೆಬ್ರವರಿ 19 ರ ಸಂಜೆ 6 ರವರೆಗೆ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಎಲ್ಲಾ ಪ್ರೌಢಶಾಲೆಗಳ 200 ಮೀಟರ್ ಸುತ್ತಳತೆಯಲ್ಲಿ ಸೆಕ್ಷನ್ 144 ರ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ.
ಹಿಜಾಬ್ – ಕೇಸರಿ ಶಾಲು ವಿವಾದದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಈ ಕ್ರಮ ಕೈಗೊಳ್ಳಲಾಗಿದೆ.
ಫೆ.14ರಿಂದ ಪ್ರೌಢಶಾಲೆಗಳು ಕಾರ್ಯನಿರ್ವಹಿಸಲಿದ್ದು, ಫೆ.16ರಿಂದ ಕಾಲೇಜುಗಳು ತೆರೆದಿರುವ ಕಾರಣ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ಪ್ರಸ್ತುತ ಮಂಗಳೂರು ಕಮಿಷನರೇಟ್ ಅತ್ಯಂತ ಸೂಕ್ಷ್ಮ ಪ್ರದೇಶವಾಗಿರುವುದರಿಂದ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಕೋವಿಡ್ ಹಿನ್ನೆಲೆಯಲ್ಲಿ ಜನಸಂದಣಿಯನ್ನು ತಡೆಯುವ ಉದ್ದೇಶವೂ ಇದೆ ಎಂದು ಆಯುಕ್ತ ಶಶಿಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಐದಕ್ಕಿಂತ ಹೆಚ್ಚು ಜನರನ್ನು ಒಟ್ಟುಗೂಡಿಸುವುದು, ಆಯುಧಗಳನ್ನು ಹಿಡಿದಿಟ್ಟುಕೊಳ್ಳುವುದು, ಮೆರವಣಿಗೆ ನಡೆಸುವುದು, ಸಂಭ್ರಮಾಚರಣೆ ನಡೆಸುವುದು ಅಥವಾ ಸರ್ಕಾರಿ ಸಂಸ್ಥೆಗಳು, ಅಧಿಕಾರಿಗಳ ವಿರುದ್ಧ ಘೋಷಣೆಗಳನ್ನು ಕೂಗುವುದು ಅಥವಾ ಸಮಾಜದಲ್ಲಿ ಶಾಂತಿ ಅಥವಾ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ತರುವ ಯಾವುದೇ ಚಟುವಟಿಕೆಗಳನ್ನು ನಡೆಸುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ ಎಂದು ಅವರು ಹೇಳಿದರು.