ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಿದೆ. ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ ಪಡೆದಿದ್ದರೆ, ಉಡುಪಿ ಜಿಲ್ಲೆ ನಾಲ್ಕನೇ ಸ್ಥಾನ ಪಡೆದಿದೆ. 95,628 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ನಲ್ಲಿ, 3,55,078 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ. 1,47,055 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ಹಾಗೂ 68,729 ವಿದ್ಯಾರ್ಥಿಗಳು ಜಸ್ಟ್ ಪಾಸಾಗಿದ್ದಾರೆ. ಈ ಬಾರಿ ವಿದ್ಯಾರ್ಥಿಗಳಿಗೆ ಎಸ್ ಎಂ ಎಸ್ ಮೂಲಕ ಫಲಿತಾಂಶ ಕಳುಹಿಸುವ ವ್ಯವಸ್ಥೆ ಮಾಡಲಾಗಿದೆ. ಎಸ್ ಎಸ್ ಎಲ್ ಸಿ ಅಂಕಗಳಲ್ಲಿ ಶೇಕಡಾ 45 ಹಾಗೂ ಪ್ರಥಮ ಪಿಯುಸಿ ಪರೀಕ್ಷೆಯ ಶೇಕಡಾ 45 ಹಾಗೂ ಆಂತರಿಕ ಮೌಲ್ಯಮಾಪನದ ಶೇಕಡಾ 10 ರಷ್ಟು ಅಂಕಗಳನ್ನು ಪರಿಗಣಿಸಿ ಫಲಿತಾಂಶ ಪ್ರಕಟಿಸಲಾಗಿದೆ. ಈ ಬಾರಿ ದ್ವಿತೀಯ ಪಿಯುಸಿಯಲ್ಲಿ 6,66,497 ವಿದ್ಯಾರ್ಥಿಗಳಿದ್ದರು. ಗ್ರೇಡ್ ಆಧಾರದಲ್ಲಿ ಫಲಿತಾಂಶ ಪ್ರಕಟಿಸಲಾಗಿದೆ. ಇದೇ ಮೊದಲ ಬಾರಿಗೆ ಪರೀಕ್ಷೆ ಇಲ್ಲದೆ ವಿದ್ಯಾರ್ಥಿಗಳನ್ನು ಉತ್ತೀರ್ಣ ಮಾಡಲಾಗಿದೆ. ಫಲಿತಾಂಶ ತಿರಸ್ಕರಿಸುವ ವಿದ್ಯಾರ್ಥಿಗಳು ಹೊಸದಾಗಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದೆ. ಪರೀಕ್ಷೆ ಬರೆಯಲು ಬಯಸುವ ವಿದ್ಯಾರ್ಥಿಗಳು ಜುಲೈ 30 ರೊಳಗೆ ಹೆಸರು ನೋಂದಾಯಿಸಬೇಕಾಗಿದೆ. ಈ ವಿದ್ಯಾರ್ಥಿಗಳಿಗೆ ಆಗಸ್ಟ್ 19 ರಿಂದ ಸೆಪ್ಟೆಂಬರ್ 3 ರೊಳಗೆ ಪರೀಕ್ಷೆ ನಡೆಸಲಾಗುತ್ತದೆ.