
ಮಂಗಳೂರು: ಹಿರಿಯ ಶಿಕ್ಷಣ ತಜ್ಞೆ, ಸಮಾಜ ಸೇವಕಿ, ಸಂಗೀತ ನಿರ್ದೇಶಕ ಗುರುಕಿರಣ್ ಅವರ ತಾಯಿ ಎ. ರತ್ನಕಾಂತಿ ಶೆಟ್ಟಿ (93) ಅವರು ವಯೋಸಹಜ ಅನಾರೋಗ್ಯದಿಂದ ಕದ್ರಿಯಲ್ಲಿರುವ ತಮ್ಮ ಸ್ವಗೃಹದಲ್ಲಿ ಭಾನುವಾರ ನಿಧನರಾದರು.ಮೃತರು ಕನ್ನಡ ಚಿತ್ರರಂಗದ ಪ್ರಸಿದ್ಧ ಸಂಗೀತ ನಿರ್ದೇಶಕ ಗುರುಕಿರಣ್ ಸೇರಿದಂತೆ ನಾಲ್ವರು ಪುತ್ರರು ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ.
ಮಂಗಳೂರಿನ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಪ್ರಾಧ್ಯಾಪಕಿಯಾಗಿ ವೃತ್ತಿಜೀವನ ಆರಂಭಿಸಿದ್ದ ಅವರು, ಕಾಲೇಜು ಶಿಕ್ಷಣ ಇಲಾಖೆಯ ಉಪನಿರ್ದೇಶಕಿಯಾಗಿ ಹಾಗೂ ಪ್ರಾದೇಶಿಕ ನಿರ್ದೇಶಕಿಯಾಗಿ ದಕ್ಷ ಸೇವೆ ಸಲ್ಲಿಸಿದ್ದರು. ‘ಪ್ರೇಮಕಾಂತಿ ಶಿಕ್ಷಣ ಮತ್ತು ಚಾರಿಟಬಲ್ ಟ್ರಸ್ಟ್’ ನ ಅಧ್ಯಕ್ಷೆಯಾಗಿ, ‘ಶ್ರೀದೇವಿ ಎಜುಕೇಷನ್ ಟ್ರಸ್ಟ್’ನ ಸಂಸ್ಥಾಪಕ ನಿರ್ದೇಶಕಿಯಾಗಿ ಹಾಗೂ ಶ್ರೀ ರಾಮಕೃಷ್ಣ ಕೋ-ಆಪರೇಟಿವ್ ಸೊಸೈಟಿಯ ನಿರ್ದೇಶಕಿಯಾಗಿ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದರು.
ಶಿಕ್ಷಣ ಕ್ಷೇತ್ರಕ್ಕೆ ನೀಡಿದ ಕೊಡುಗೆಗಾಗಿ ಹಲವು ರಾಷ್ಟ್ರೀಯ ಪ್ರಶಸ್ತಿಗಳಿಗೆ ಭಾಜನರಾಗಿದ್ದ ಅವರ ನಿಧನಕ್ಕೆ ವಿವಿಧ ಕ್ಷೇತ್ರದ ಗಣ್ಯರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.


