ಮಂಗಳೂರು: ಅಪ್ರಾಪ್ತ ಬಾಲಕಿಯೊಬ್ಬಳು ಬೆಳಗ್ಗೆ ಶಾಲೆಗೆ ತೆರಳುತ್ತಿದ್ದ ವೇಳೆ ಅಪರಿಚಿತ ವ್ಯಕ್ತಿಯೊಬ್ಬ ಸ್ಕೂಟರಿನಲ್ಲಿ ಬಂದು ವಿದ್ಯಾರ್ಥಿನಿಯ ಮೇಲೆ ಲೈಂಗಿಕ ಕಿರುಕುಳ ನೀಡಿರುವ ಘಟನೆ ಇಂದು ಬೆಳಗ್ಗೆ ತಲಪಾಡಿ ಅಲಂಕಾರುಗುಡ್ಡೆ ಬಳಿ ನಡೆದಿದೆ.
ಅಪ್ರಾಪ್ತ ಬಾಲಕಿಯು ಶಾಲೆಗೆ ಹೋಗುತ್ತಿದ್ದ ವೇಳೆ ಕೋಟೆಕಾರು ಬಳಿಯ ತಲಪಾಡಿ ಚೆಕ್ ಪೋಸ್ಟ್ ಬಳಿ ಬಸ್ಸು ಹತ್ತಲು ಒಳದಾರಿಯಾಗಿ ನಡೆಕೊಂಡು ಬರುವಾಗ ಘಟನೆ ಸಂಭವಿಸಿದೆ. ವಿದ್ಯಾರ್ಥಿನಿ ಗಾಬರಿಯಿಂದ ಚೀರಾಡಿದಾಗ ಸ್ಥಳೀಯರು ಬರುವಷ್ಟರಲ್ಲಿ ಆರೋಪಿ ಪರಾರಿಯಾಗಿದ್ದಾನೆ. ಸ್ಥಳೀಯರು ವಿದ್ಯಾರ್ಥಿನಿಗೆ ಧೈರ್ಯ ತುಂಬಿ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಘಟನಾ ಸ್ಥಳಕ್ಕೆ ಉಳ್ಳಾಲ ಪೊಲೀಸರು ತೆರಳಿ ಆರೋಪಿಗಾಗಿ ಶೋಧ ಕಾರ್ಯ ಆರಂಭಿಸಿದ್ದಾರೆ. ಸ್ಥಳೀಯವಾಗಿ ಹಲವು ಕಾರ್ಖಾನೆಗಳಿಗೆ ವಲಸೆ ಕಾರ್ಮಿಕರು ಬಂದಿದ್ದು, ಅವರ ದಾಖಲೆಗಳನ್ನು ಪೊಲೀಸ್ ಠಾಣೆಯಲ್ಲಿ ಮಾಲೀಕರು ದಾಖಲಿಸಿರುವುದಿಲ್ಲ. ಅಲ್ಲದೆ ಈ ಭಾಗದಲ್ಲಿ ಇಂತಹ ಕೃತ್ಯಗಳು ಅನೇಕ ನಡೆಯುತ್ತಿದ್ದು, ಈ ಬಗ್ಗೆ ಗ್ರಾಮಸ್ಥರು ಗ್ರಾಮ ಪಂಚಾಯಿತಿ ಗಮನಕ್ಕೆ ತಂದಿದ್ದರೂ, ಕ್ರಮ ಕೈಗೊಂಡಿಲ್ಲ ಅನ್ನುವ ಆರೋಪ ಕೇಳಿಬಂದಿದೆ. ಆರೋಪಿ ಕುರಿತಂತೆ ಸಿಸಿಟಿವಿಯಲ್ಲಿ ದಾಖಲೆಯಿದ್ದು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.