ಮಡಿಕೇರಿ: ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತೊಮ್ಮೆ ಮಾಂಸ ತಿಂದು ದೇವಸ್ಥಾನ ಪ್ರವೇಶಿಸಿದ ಆರೋಪಕ್ಕೆ ಗುರಿಯಾಗಿದ್ದಾರೆ.
ಸಿದ್ಧರಾಮಯ್ಯ ನಾಟಿ ಕೋಳಿ ಸಾರು ತಿಂದು ದೇವಸ್ಥಾನಕ್ಕೆ ಹೋಗಿದ್ದಾರೆ ಎನ್ನಲಾದ ವೀಡಿಯೋ ಮತ್ತು ಫೋಟೋಗಳು
ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.
ಕಳೆದ ಗುರುವಾರ ಕೊಡಗು ಜಿಲ್ಲಾ ಪ್ರವಾಸ ಕೈಗೊಂಡಿದ್ದ ವೇಳೆ ಮಡಿಕೇರಿಯ ಅತಿಥಿ ಗೃಹದಲ್ಲಿ ಮಧ್ಯಾಹ್ನ ಕೋಳಿ ಸಾರು ಸೇವಿಸಿದ್ದ ಸಿದ್ದರಾಮಯ್ಯ, ಮಧ್ಯಾಹ್ನದ ಬಳಿಕ ಕೊಡ್ಲಿಪೇಟೆಯ ಬಸವೇಶ್ವರ ದೇವಸ್ಥಾನಕ್ಕೆ ತೆರಳಿದ್ದಾರೆ ಎಂದು ಹೇಳಲಾಗಿದೆ.
ಇದೇ ವೇಳೆ ಹಿಂದೂ ಪದ್ಧತಿಯಲ್ಲಿ ಮಾಂಸಾಹಾರ ತಿಂದು ಯಾರೂ ದೇವಸ್ಥಾನಕ್ಕೆ ಹೋಗುವುದಿಲ್ಲ, ಆದ್ರೆ ಸಿದ್ದರಾಮಯ್ಯ ಆ ರೀತಿ ಮಾಡಿದ್ದರೆ ಅದು ಖಂಡನಾರ್ಹ ಎಂದು ವಿರಾಜಪೇಟೆ ಶಾಸಕ ಕೆ.ಜಿ. ಬೋಪಯ್ಯ ಹೇಳಿದ್ದಾರೆ.
ಒಂದು ವೇಳೆ ಸಿದ್ದರಾಮಯ್ಯ ತಪ್ಪು ಮಾಡಿದ್ದರೆ ದೇವರು ಶಿಕ್ಷೆ ಕೊಡುತ್ತಾನೆ, ಮಾಂಸಾಹಾರ ಸೇವಿಸಿಲ್ಲ ಎನ್ನುವುದಾದರೂ ಅದನ್ನೂ ದೇವರೇ ನೋಡಿಕೊಳ್ಳುತ್ತಾನೆ ಎಂದು ಶಾಸಕ ಬೋಪಯ್ಯ ಪ್ರತಿಕ್ರಿಯಿಸಿದ್ದಾರೆ.
ಈ ಹಿಂದೆ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸದ ವೇಳೆ ಸಿದ್ದರಾಮಯ್ಯ ಮಾಂಸಾಹಾರ ಸೇವಿಸಿ ಧರ್ಮಸ್ಥಳ ಮಂಜುನಾಥ ಸ್ವಾಮಿ ದೇವಸ್ಥಾನ ಪ್ರವೇಶಿಸಿದ್ದು ಸಾಕಷ್ಟು ವಿವಾದಕ್ಕೆ ಗುರಿಯಾಗಿತ್ತು.