ಕಲಬುರಗಿ: ಸಿದ್ದರಾಮಯ್ಯ ಸರ್ಕಾರವು ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ, ಮುದ್ರಾಂಕ ಶುಲ್ಕ, ಜನನ ಮರಣ ಪ್ರಮಾಣಪತ್ರ ಪಡೆಯುವ ಶುಲ್ಕ ಹೆಚ್ಚಳ, ಅಬಕಾರಿ ಸುಂಕ ಏರಿಕೆ, ಮತ್ತೆ ಇದೀಗ ಹಾಲಿನ ಬೆಲೆ ಏರಿಕೆ ಮಾಡುವ ಮೂಲಕ ‘ಬೆಲೆ ಏರಿಕೆ’ಯೆಂಬ ಅಘೋಷಿತ ಆರನೇ ಗ್ಯಾರಂಟಿಯನ್ನು ಜಾರಿಗೆ ತಂದಿದೆ ಎಂದು ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಕುಟುಕಿದರು.
ಅವರು ಮಂಗಳವಾರದಂದು ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ಸಿದ್ಧರಾಮಯ್ಯ ಸರಕಾರದ ಬೆಲೆ ಏರಿಕೆಯಿಂದ ಜನರು ತತ್ತರಿಸಿದ್ದಾರೆ. ಗ್ಯಾರಂಟಿಗಳ ನೆಪದಲ್ಲಿ ಶಾಸಕರಿಗೆ ಅನುದಾನ ನೀಡುತ್ತಿಲ್ಲ ಎಂಬ ಆಕ್ಷೇಪ ಸರ್ಕಾರದ ಒಳಗಿನಿಂದಲೇ ಕೇಳಿ ಬರುತ್ತಿದೆ. ಗ್ಯಾರಂಟಿ ಹೆಸರು ಹೇಳಿ ನಮ್ಮ ಮೂಗಿಗೆ ತುಪ್ಪ ಸವರಿ ತಾವು ಭ್ರಷ್ಟಾಚಾರದಲ್ಲಿ ಮುಳುಗಿದ್ದಾರೆ ಎಂದು ಸಿದ್ದರಾಮಯ್ಯ ಸರ್ಕಾರದ ಸಚಿವರೇ ಹೇಳಿಕೆ ನೀಡುತ್ತಿದ್ದಾರೆ. ಅಷ್ಟೇಅಲ್ಲದೇ ಉಪ ಮುಖ್ಯಮಂತ್ರಿ ಹುದ್ದೆ ಸೃಷ್ಟಿಯ ಬಗ್ಗೆ ಹೇಳಿಕೆ ನೀಡುವ ಮೂಲಕ ಸರ್ಕಾರದಲ್ಲಿ ಎಲ್ಲ ಸರಿ ಇಲ್ಲ ಎಂಬುದನ್ನು ತೋರಿಸುತ್ತದೆ. ಈ ಚರ್ಚೆಯನ್ನು ಜೀವಂತ ಇಡುವ ಮೂಲಕ ಡಿ.ಕೆ. ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಪಟ್ಟದಿಂದ ದೂರ ಇಡುವ ಪ್ರಯತ್ನ ನಡೆದಿದೆ. ಡಿಸಿಎಂ ಚರ್ಚೆ ಕಾಂಗ್ರೆಸ್ ಸರ್ಕಾರದ ಪತನದೊಂದಿಗೆ ಮುಕ್ತಾಯವಾದರೂ ಅಚ್ಚರಿ ಇಲ್ಲ. ಬಹುಮತ ಇದ್ದರೂ ಪಕ್ಷದೊಳಗಿನ ಒಡಕು ಸರ್ಕಾರವನ್ನು ಕೆಡವುತ್ತದೆ. ಹಾಗೆಂದು ನಾವು ಈ ಸರ್ಕಾರ ಬೀಳಲಿ ಎಂದು ಬಯಸುತ್ತಿಲ್ಲ. ಆ ನಿಟ್ಟಿನಲ್ಲಿ ಪ್ರಯತ್ನವನ್ನೂ ಮಾಡುತ್ತಿಲ್ಲ’ ಎಂದು ಸಿ.ಟಿ. ರವಿ ಸ್ಪಷ್ಟಪಡಿಸಿದರು.
ಇನ್ನು ಸಿದ್ಧರಾಮಯ್ಯ ಅವರು ಮಾಡಿದಂತಹ ಆರೋಪ ‘ಕೇಂದ್ರ ಸರ್ಕಾರವು ರಷ್ಯಾದಿಂದ ಕಡಿಮೆ ಬೆಲೆಗೆ ಖರೀದಿಸಿದ ತೈಲದ ಲಾಭವನ್ನು ಗ್ರಾಹಕರಿಗೆ ವರ್ಗಾಯಿಸದೇ ಇರುವುದರಿಂದ ರಾಜ್ಯ ಸರ್ಕಾರ ಇಂಧನ ಬೆಲೆ ಏರಿಕೆ ಮಾಡಬೇಕಾಯಿತು’ ಎನ್ನುವುದಕ್ಕೆ ಪ್ರತಿಕ್ರಿಯಿಸಿದ ಸಿ.ಟಿ. ರವಿ, ‘ಸಿದ್ದರಾಮಯ್ಯ ಅವರು ಸುಳ್ಳು ಹೇಳುವುದರಲ್ಲಿ ಸಿದ್ಧ ಕಲೆಯನ್ನು ರೂಢಿಸಿಕೊಂಡಿದ್ದಾರೆ. ಪೆಟ್ರೋಲ್, ಡೀಸೆಲ್ ಬೆಲೆಯನ್ನು ಹೆಚ್ಚಳ ಮಾಡುವಂತೆ ಮೋದಿಯವರು ಹೇಳಿದ್ದರಾ? ಹಲವು ಬಾರಿ ಬಜೆಟ್ ಮಂಡಿಸಿರುವ ಸಿದ್ದರಾಮಯ್ಯ ಅವರಿಗೆ ಇಂಧನ ಬೆಲೆ ಏರಿಕೆಯಿಂದ ಆಗುವ ಸಮಸ್ಯೆಗಳ ಅರಿವಿಲ್ಲವೇ’ ಎಂದು ಪ್ರಶ್ನಿಸಿದರು.
ಮಾಜಿ ಸಚಿವ ಎನ್. ಮಹೇಶ್, ಶಾಸಕ ಬಸವರಾಜ ಮತ್ತಿಮಡು, ವಿಧಾನಪರಿಷತ್ ಸದಸ್ಯರಾದ ಬಿ.ಜಿ. ಪಾಟೀಲ, ಶಶೀಲ್ ಜಿ. ನಮೋಶಿ, ಬಿಜೆಪಿ ಶಹರ ಘಟಕದ ಅಧ್ಯಕ್ಷ ಚಂದು ಪಾಟೀಲ, ಅಮರನಾಥ ಪಾಟೀಲ, ಅವ್ವಣ್ಣ ಮ್ಯಾಕೇರಿ ಗೋಷ್ಠಿಯಲ್ಲಿದ್ದರು.