Thursday, June 4, 2026
Homeಉತ್ತರ ಕನ್ನಡಉತ್ತರ ಕನ್ನಡ: ಮಳೆ ಹಾನಿ ಪ್ರದೇಶಗಳಿಗೆ ಸಿದ್ಧರಾಮಯ್ಯ ಭೇಟಿ

ಉತ್ತರ ಕನ್ನಡ: ಮಳೆ ಹಾನಿ ಪ್ರದೇಶಗಳಿಗೆ ಸಿದ್ಧರಾಮಯ್ಯ ಭೇಟಿ

- Advertisement -
- Advertisement -

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಇಂದು ಮಳೆ ಹಾನಿ ಪೀಡಿತ ಪ್ರದೇಶಗಳಿಗೆ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಜಿಲ್ಲೆಯ ಕದ್ರಾ ಅಣೆಕಟ್ಟು ಪ್ರದೇಶಕ್ಕೆ ಸಿದ್ದರಾಮಯ್ಯ ಅವರು ಇಂದು ಭೇಟಿ ನೀಡಿ ಪ್ರವಾಹದಿಂದ ಹಾನಿಗೊಳಗಾದ ಪ್ರದೇಶಗಳನ್ನು ವೀಕ್ಷಿಸಿ ಸಂತ್ರಸ್ತರ ಅಹವಾಲು ಆಲಿಸಿದರು.

ನಂತರ ಕದ್ರಾ ಅಣೆಕಟ್ಟು ಪ್ರದೇಶದಲ್ಲಿರುವ ಕರ್ನಾಟಕ ವಿದ್ಯುತ್ ನಿಗಮದ ಕಚೇರಿಗೆ ಸಿದ್ದರಾಮಯ್ಯ ಭೇಟಿ ನೀಡಿ ಆ ಭಾಗದಲ್ಲಿ ಪ್ರವಾಹದಿಂದಾಗಿ ಸಂತ್ರಸ್ತರಾದವರ ಜೊತೆ ಸಮಾಲೋಚನೆ ನಡೆಸಿದರು. ಮಳೆಯಿಂದಾಗಿ ಮನೆಗಳನ್ನು ಕಳೆದುಕೊಂಡವರಿಗೆ ನಿಗಮದ ವಸತಿ ಗೃಹಗಳಲ್ಲಿ ಆಶ್ರಯ ನೀಡುವಂತೆ ಅಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚಿಸಿದರು.


ನಿಗಮದ ವ್ಯವಸ್ಥಾಪಕ ನಿರ್ದೇಶಕ ಪೊನ್ನುರಾಜ್ ಅವರನ್ನು ದೂರವಾಣಿ ಮೂಲಕ ಸಂಪರ್ಕಿಸಿದ ಸಿದ್ದರಾಮಯ್ಯ ನಿರಾಶ್ರಿತರಿಗೆ ಅನುಕೂಲ ಮಾಡಿಕೊಡುವಂತೆ ತಿಳಿಸಿದರು. ನಂತರ ಅಂಕೋಲಾ ತಾಲೂಕಿನ ವಾಸರಿ ಕುದ್ರಿಗಿ, ಶಿರೂರು ಗ್ರಾಮಗಳಿಗೆ ಸಿದ್ದರಾಮಯ್ಯ ಅವರು ಭೇಟಿ ನೀಡಿ ಪ್ರವಾಹ ಸಂತ್ರಸ್ತರ ಅಹವಾಲು ಆಲಿಸಿದರು. ಬಳಿಕ ಗುಳ್ಳಾಪುರದಲ್ಲಿ ಕುಸಿದಿರುವ ಸೇತುವೆಯನ್ನು ಸಿದ್ದರಾಮಯ್ಯ ವೀಕ್ಷಿಸಿದರು.

ಈ ವೇಳೆ ಮಾಜಿ ಸಚಿವ ಆರ್.ವಿ. ದೇಶಪಾಂಡೆ, ಮಾಜಿ ಶಾಸಕರಾದ ಮಂಕಾಳ ವೈದ್ಯ, ಸತೀಶ್ ಸೈಲ್, ಮತ್ತು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಭೀಮಣ್ಣ ನಾಯಕ್ ಹಾಜರಿದ್ದರು.‌ ಮೊನ್ನೆಯಷ್ಟೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಉತ್ತರ ಕನ್ನಡ ಜಿಲ್ಲೆಗೆ ಭೇಟಿ ನೀಡಿ ಮಳೆ ಹಾನಿ ಬಗ್ಗೆ ಪರಿಶೀಲನೆ ನಡೆಸಿದ್ದರು.

- Advertisement -

Latest News

error: Content is protected !!