Thursday, June 4, 2026
Homeಉತ್ತರ ಕನ್ನಡಉತ್ತರ ಕನ್ನಡ: ಶಿರೂರು ಗುಡ್ಡ ಕುಸಿತ ಜಾಗಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ  

ಉತ್ತರ ಕನ್ನಡ: ಶಿರೂರು ಗುಡ್ಡ ಕುಸಿತ ಜಾಗಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ  

- Advertisement -
- Advertisement -

ಉತ್ತರ ಕನ್ನಡ: ಶಿರೂರು ಗುಡ್ಡ ಕುಸಿತ ಜಾಗಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿದ್ದಾರೆ.  ಸಿಎಂ ಸಿದ್ಧರಾಮಯ್ಯ ಶಿರೂರು ಬಳಿಯ ಗುಡ್ಡ ಕುಸಿತ ದುರಂತ ಪ್ರಕರಣದಲ್ಲಿ ಮೃತಪಟ್ಟಿರುವ ಕುಟುಂಬಗಳಿಗೆ ತಲಾ 5 ಲಕ್ಷ ಪರಿಹಾರ ನೀಡುವುದಾಗಿ ಘೋಷಿಸಿದ್ದಾರೆ.

ಅತ್ಯಂತ ಅಪಾಯಕಾರಿ ಸನ್ನಿವೇಶದಲ್ಲಿ ಕಾರ್ಯಾಚರಣೆ ನಡೆಸುತ್ತಿರುವ SDRF ಮತ್ತು NDRF ತಂಡಗಳ ಜೊತೆ ಚರ್ಚೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಿಬ್ಬಂದಿಯ ಕಾರ್ಯಕ್ಷಮತೆಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಗುಡ್ಡ ಕುಸಿತದಿಂದ ಮುಚ್ಚಿ ಹೋಗಿರುವ ರಸ್ತೆಯ ಎಡಭಾಗದಲ್ಲಿ ಕುಸಿತದ ಗುಡ್ಡ-ಬಲ ಭಾಗದಲ್ಲಿ ಭೋರ್ಗರೆದು ಹರಿಯುತ್ತಿರುವ ಕಾಳಿ ನದಿ ಇದೆ. ಜೊತೆಗೆ ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಯಲ್ಲಿ ಮಣ್ಣಿನಡಿ ಸಿಲುಕಿರುವ ಜೀವಗಳ ಪತ್ತೆ ಕಾರ್ಯ ಬಹಳ ಸವಾಲಿನದ್ದಾಗಿದೆ ಎಂದು ಮುಖ್ಯಮಂತ್ರಿಗಳು ಸಿಬ್ಬಂದಿಯ ಶ್ರಮಕ್ಕೆ ಮೆಚ್ಚುಗೆ ಸೂಚಿಸಿದರು.

ನಾಲ್ಕು ತಂಡಗಳು ಗುಡ್ಡ ಕುಸಿತದ ಕೆಳಗೆ ಸಿಲುಕಿರಬಹುದಾದವರ ಪತ್ತೆಗೆ ರಾಡಾರ್ ತಂತ್ರಜ್ಞಾನ ಬಳಸಿ ಕಾರ್ಯಾಚರಣೆ ನಡೆಸುತ್ತಿವೆ. ಇನ್ನು ನಾಲ್ಕು ತಂಡಗಳು ಮತ್ತೊಂದು ಬದಿಯ ನದಿಯೊಳಗೆ ಕಾರ್ಯಾಚರಣೆ ನಡೆಸುತ್ತಿವೆ. ಈ ಬಗ್ಗೆ ಹಲವು ದಿನಗಳಿಂದ ತಾಲ್ಲೂಕಿನಲ್ಲೇ ಮೊಕ್ಕಾಂ ಹೂಡಿರುವ ಕಂದಾಯ ಸಚಿವ ಕೃಷ್ಣಬೈರೇಗೌಡರು ಮುಖ್ಯಮಂತ್ರಿಗಳಿಗೆ ವಿವರಿಸಿದರು.

ಕಾರ್ಯಾಚರಣೆ ನಡೆಯುತ್ತಿರುವ ಜಾಗ ಮತ್ತು ಮಣ್ಣು ತುಂಬಿರುವ ರಸ್ತೆಯೂ ಕುಸಿಯುವ ಸಾಧ್ಯತೆಗಳ ಬಗ್ಗೆ ಮುಖ್ಯಮಂತ್ರಿಗಳು ಅಧಿಕಾರಿಗಳಿಂದ ಮಾಹಿತಿ ಪಡೆದು ಈ ಬಗ್ಗೆ ಹೆಚ್ಚು ಜಾಗರೂಕರಾಗಿರುವಂತೆ ಎಚ್ಚರಿಸಿದರು.

ಗುಡ್ಡ ಕುಸಿತದ ಸ್ಥಳ ಒಂದು ರೀತಿ ದ್ವೀಪದಂತಾಗಿದೆ. ಸುತ್ತಲೂ ಕಾಳಿ ನದಿ ಭೋರ್ಗರೆದು ಹರಿಯುತ್ತಿದೆ. ನಡುವೆ ಅರ್ಧ ಕುಸಿದ ಗುಡ್ಡ ನಿಂತಿದೆ. ಹೀಗಾಗಿ ಕಾರ್ಯಾಚರಣೆ ವೇಳೆ ಎದುರಾಗಬಹುದಾದ ಅಪಾಯಗಳು ಮತ್ತು ಸವಾಲುಗಳ ಬಗ್ಗೆ ಉನ್ನತ ಮಟ್ಟದ ತಜ್ಞರಿಂದ ಮಾಹಿತಿ ಪಡೆದು ತಂತ್ರಜ್ಞಾನದ ನೆರವು ಪಡೆಯುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.

ಕಂದಾಯ ಸಚಿವ ಕೃಷ್ಣಬೈರೇಗೌಡ, ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ, ಮಾಜಿ ಸಚಿವ ಆರ್.ವಿ.ದೇಶಪಾಂಡೆ, ಶಾಸಕ ಸತೀಶ್ ಸೈಲ್, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳಾದ ಎಲ್.ಕೆ. ಅತೀಕ್, ಶಾಲಿನಿ ರಜನೀಶ್ ಸೇರಿ ಕಂದಾಯ ಇಲಾಖೆಯ ಹಿರಿಯ ಅಧಿಕಾರಿ ಮತ್ತು ಸಿಬ್ಬಂದಿ ಸ್ಥಳದಲ್ಲಿದ್ದರು.‌

- Advertisement -

Latest News

error: Content is protected !!