ಬೆಂಗಳೂರು: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಲಾಂಜ್ ನಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಇಂದು ಮಾತುಕತೆ ನಡೆಸಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಬೆಳಗಾವಿಗೆ ತೆರಳುವ ಸಂದರ್ಭದಲ್ಲಿ ಇಬ್ಬರು ನಾಯಕರು ಲಾಂಜ್ ನಲ್ಲಿ ಭೇಟಿ ಮಾಡಿದ್ದಾರೆ. ಇದೊಂದು ಸೌಹಾರ್ದ ಭೇಟಿ ಎಂದು ಉಭಯ ನಾಯಕರ ಕಚೇರಿ ಮೂಲಗಳು ಹೇಳಿವೆ.
ರಾಜ್ಯಸಭಾ ಚುನಾವಣೆಯಲ್ಲಿ ನಾಲ್ಕನೇ ಅಭ್ಯರ್ಥಿಯ ಗೆಲುವಿಗಾಗಿ ಕಾಂಗ್ರೆಸ್ ಮತ್ತು ಬಿಜೆಪಿ ತೀವ್ರ ಕಸರತ್ತು ಆರಂಭಿಸಿರುವ ವೇಳೆ ಉಭಯ ನಾಯಕರ ಮಾತುಕತೆ ನಡೆದಿದೆ. ಇಂದು ಬೆಳಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ್ದ ಯಡಿಯೂರಪ್ಪ, ಆತ್ಮ ಸಾಕ್ಷಿಯ ಮತಗಳ ಬಗ್ಗೆ ಸಿದ್ದರಾಮಯ್ಯ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ಕೊಡಲು ಹೋಗುವುದಿಲ್ಲ ಎಂದಿದ್ದರು. ಕಾಂಗ್ರೆಸ್- ಜೆಡಿಎಸ್ ಹೊಂದಾಣಿಕೆ ಮಾಡಿಕೊಂಡಲ್ಲಿ ಬಿಜೆಪಿಗೆ ಸಮಸ್ಯೆಯಾಗುವ ವಿಚಾರಕ್ಕೆ, ಅನಗತ್ಯವಾಗಿ ನಾನ್ಯಾಕೆ ಅದರ ಬಗ್ಗೆ ಮಾತಾಡಲಿ ಎಂದ ಅವರು ಆರ್ ಎಸ್ ಎಸ್ ಚಡ್ಡಿ ಸುಡುವ ಕಾಂಗ್ರೆಸ್ ಅಭಿಯಾನದ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದರು.