ಪುತ್ತೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿಯಾಗುವ ಕನಸು ಕಾಣುತ್ತಿದ್ದು, ಕನಸು ಕಾಣೋದು ತಪ್ಪಲ್ಲ ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ವ್ಯಂಗ್ಯವಾಡಿದ್ದಾರೆ. ಪುತ್ತೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸಿದ್ದರಾಮಯ್ಯ ಇದೀಗ ಮತ್ತೆ ಮುಖ್ಯಮಂತ್ರಿಯಾಗುವ ಕನಸು ಕಾಣುತ್ತಿದ್ದಾರೆ. ಅವರು ಕನಸು ಕಾಣೋದು ತಪ್ಪಲ್ಲ, ಅವರಿಗೆ ಕನಸು ಬೀಳೋದೇ ತಪ್ಪು ಎಂದ ಅವರು, ರಾಜ್ಯಸಭೆಗೆ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆಯುತ್ತಿದ್ದು, ನಾಳೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಲಿದೆ ಎಂದರು. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಪಕ್ಷದ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಗುಜರಾತ್ ನಲ್ಲಿದ್ದು, ಅಲ್ಲಿನ ಕಾರ್ಯಕ್ರಮ ಇಂದು ಮುಗಿದ ಬಳಿಕ ಪಕ್ಷದ ಮುಖಂಡರು ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಲಿದ್ದಾರೆ ಎಂದರು.
ಕಾಂಗ್ರೆಸ್ ಗೆ ಮುಂಬರುವ ಗುಜರಾತ್ ಮತ್ತು ಹಿಮಾಚಲ ಪ್ರದೇಶದ ಚುನಾವಣೆಯಲ್ಲಿ ಹಿನ್ನೆಡೆಯಾಗಲಿದೆ ಎನ್ನುವ ಚುನಾವಣಾ ತಂತ್ರಗಾರ ಪ್ರಶಾಂತ್ ಕಿಶೋರ್ ಲೆಕ್ಕಾಚಾರದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ನ ಎಲ್ಲಾ ಸಂಗತಿ ಇಡೀ ಜಗತ್ತಿಗೆ ಗೊತ್ತಿದೆ. ಕಾಂಗ್ರೆಸ್ ಎಲ್ಲಾ ಕಡೆ ತನ್ನ ಅಸ್ತಿತ್ವವನ್ನು ಕಳೆದುಕೊಂಡಿದ್ದು,ಇದಕ್ಕೆ ಪಂಜಾಬ್ ಸೂಕ್ತ ಉದಾಹರಣೆ ಆಗಿದೆ ಎಂದ ಅವರು, ಪಂಜಾಬ್ ನಲ್ಲಿ ಕಾಂಗ್ರೆಸ್ ನಿರ್ನಾಮವಾಗಿದೆ. ಕಾಂಗ್ರೆಸ್ ದೇಶದಲ್ಲಿ ಎರಡು ರಾಜ್ಯದಲ್ಲಿ ಬಿಟ್ಟರೆ ಮತ್ಯಾವ ಕಡೆಗೂ ಇಲ್ಲವೇ ಇಲ್ಲ ಎಂದರು.