ಮಂಗಳೂರು: ಬಿಜೆಪಿಯಲ್ಲಿ ಖಾಲಿಯಾಗುವ ಸಿಎಂ ಹುದ್ದೆಗೆ ದಲಿತ ನಾಯಕನನ್ನು ಆಯ್ಕೆ ಮಾಡಲಿ ಎಂದು ಹೇಳುವ ಮೂಲಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಅವರಿಗೆ ಸವಾಲು ಹಾಕಿದ್ದಾರೆ.
ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ದಲಿತರನ್ನ ಸಿಎಂ ಮಾಡಲಿ ಎಂದು ನಳಿನ್ ಕುಮಾರ್ ಕಟೀಲ್ ನನಗೆ ಹೇಳಿದ್ದರು, ಆದರೆ ಈಗ ಆ ಅವಕಾಶ ಅವರಿಗಿದೆ ಸಾಮಾಜಿಕ ನ್ಯಾಯ ಇದೆ ಎಂದು ಹೇಳುವ ಅವರು ತಕ್ಷಣ ದಲಿತರನ್ನ ಸಿಎಂ ಮಾಡಲಿ ಎಂದಿದ್ದಾರೆ.
ಫೋನ್ ಕದ್ದಾಲಿಕೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ಫೋನ್ ಕದ್ದಾಲಿಕೆ ಇದೇ ಮೊದಲಲ್ಲ, ಬಿಜೆಪಿ ಇದಕ್ಕೂ ಮೊದಲು ಮಾಡಿದೆ. 2019ರಲ್ಲಿ ನನ್ನ ಪಿಎ ವೆಂಕಟೇಶ್ ಫೋನ್ ಕದ್ದಾಲಿಕೆ ಮಾಡಿದ್ದಾರೆ. ಕುಮಾರಸ್ವಾಮಿ, ಡಾ.ಜಿ.ಪರಮೇಶ್ವರ್ ಸೇರಿ ಹಲವರ ಫೋನ್ ಕದ್ದಾಲಿಕೆ ಮಾಡಿದ್ದಾರೆ. ಸಮ್ಮಿಶ್ರ ಸರಕಾರ ಕಿತ್ತು ಹಾಕಲು ಏನು ಬೇಕೋ ಅದೆಲ್ಲಾ ಮಾಡಿದ್ದಾರೆ. ನಾನು ಈ ಬಗ್ಗೆ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಮೂಲಕ ತನಿಖೆಗೆ ಆಗ್ರಹಿಸುತ್ತೇನೆ ಎಂದರು
ಮುಖ್ಯಮಂತ್ರಿ ಸ್ಥಾನದಿಂದ ಈಗ ಯಡಿಯೂರಪ್ಪರನ್ನು ಬದಲಾವಣೆ ಮಾಡುತ್ತಾರೆ. ಆದರೆ ಬರೋನು ಕೂಡ ಭ್ರಷ್ಟನೇ ಆಗಿರ್ತಾನೆ. ಯಾವುದೇ ಮಠಾಧೀಶರು ರಾಜಕಾರಣಕ್ಕೆ ಕೈ ಹಾಕಬಾರದು ಯಾಕೆಂದರೆ ಇಲ್ಲಿ ಜನಾಭಿಪ್ರಾಯ ಬಹಳ ಮುಖ್ಯ, ಪಕ್ಷದ ಒಳಗಿನ ವಿಚಾರದಲ್ಲಿ ಯಾರೂ ಕೈ ಹಾಕಬಾರದು” ಎಂದಿದ್ದಾರೆ.
ಕಾಂಗ್ರೆಸ್ ಯುವ ನಾಯಕ ರಾಹುಲ್ ಗಾಂಧಿಯವರು ಎಲ್ಲರೂ ಒಟ್ಟಾಗಿ ಭ್ರಷ್ಟ ಬಿಜೆಪಿ ಸರ್ಕಾರ ಬದಲಾಯಿಸಿ ಎಂದಿದ್ದರು. ನಾನು ತಿಂಗಳ ಹಿಂದೆಯೇ ಯಡಿಯೂರಪ್ಪ ಬದಲಾಗ್ತಾರೆ ಅಂದಿದ್ದೆ. ಈ ಬಗ್ಗೆ ನನಗೆ ಹೈಕಮಾಂಡ್ ಮೂಲದ ಮಾಹಿತಿ ಇತ್ತು, ಆದರೆ ಯಾರು ಬರ್ತಾರೆ ಅನ್ನೋ ಮಾಹಿತಿಯಿಲ್ಲ ಎಂದು ಹೇಳಿದ್ದಾರೆ.