ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ 75ನೇ ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿ ದೇಶವಾಸಿಗಳಿಗೆ ಶುಭಾಶಯ ಕೋರಿದ್ದಾರೆ. 75 ವರ್ಷಗಳಲ್ಲಿ ದೇಶ ಹಲವಾರು ಸಾಧನೆಗಳನ್ನು ಮಾಡಿದೆ. ಆದರೆ ಇಂದಿನ ‘ಸ್ವಯಂ ನಿಯೋಜಿತ ಸರ್ಕಾರ’ ಸ್ವಾತಂತ್ರ್ಯ ಹೋರಾಟಗಾರರ ಮಹಾನ್ ತ್ಯಾಗ ಮತ್ತು ದೇಶದ ಅಮೋಘ ಸಾಧನೆಗಳನ್ನು ಕ್ಷುಲ್ಲಕಗೊಳಿಸಲು ಹೊರಟಿದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ರಾಜಕೀಯ ಲಾಭಕ್ಕಾಗಿ ಐತಿಹಾಸಿಕ ಸತ್ಯಗಳ ಬಗ್ಗೆ ಮಾಡಿದ ತಪ್ಪು ಹೇಳಿಕೆಗಳನ್ನು ಮತ್ತು ಗಾಂಧಿಯಂತಹ ಮಹಾನ್ ನಾಯಕರನ್ನು ಪ್ರಶ್ನಿಸುವ ಪ್ರತಿಯೊಂದು ಪ್ರಯತ್ನವನ್ನು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ತೀವ್ರವಾಗಿ ಖಂಡಿಸುತ್ತದೆ. ಕರ್ನಾಟಕದಲ್ಲಿ ಹರ್ ಘರ್ ತಿರಂಗಾ ಅಭಿಯಾನದಿಂದ ಜವಾಹರಲಾಲ್ ನೆಹರು ಅವರ ಹೆಸರನ್ನು ಬಿಜೆಪಿ ಕೈಬಿಟ್ಟಿದೆ ಎಂದು ಆರೋಪಿಸಿ ಗದ್ದಲ ಭುಗಿಲೆದ್ದ ನಂತರ ಸೋನಿಯಾ ಗಾಂಧಿ ಈ ಹೇಳಿಕೆ ನೀಡಿದ್ದಾರೆ
ಪಕ್ಷದ ಪ್ರಧಾನ ಕಚೇರಿಯಲ್ಲಿ ಕಾಂಗ್ರೆಸ್ನ ಹಿರಿಯ ನಾಯಕರು ರಾಷ್ಟ್ರಧ್ವಜಾರೋಹಣ ನೆರವೇರಿಸಿದರು. ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆ ಸೋನಿಯಾ ಗಾಂಧಿ ಕಾರ್ಯಕ್ರಮಕ್ಕೆ ಗೈರು ಹಾಜರಾಗಿದ್ದರು. ರಾಹುಲ್ ಗಾಂಧಿ ಮತ್ತು ಪಕ್ಷದ ಇತರ ಹಲವು ಹಿರಿಯ ನಾಯಕರು ಕೂಡ ದೇಶದ ಜನತೆಗೆ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯ ಕೋರಿದ್ದಾರೆ.