ಶಿವಮೊಗ್ಗ: ಅರಣ್ಯ ಇಲಾಖೆಗೆ ಸಂಬಂಧಿಸಿದ ವಿಚಾರಗಳನ್ನು ಕಾನೂನಾತ್ಮಕವಾಗಿ ಕೈಗೆತ್ತಿಕೊಳ್ಳಲು ಮೇ ಮೊದಲನೇ ವಾರದಲ್ಲಿ ಜನಪ್ರತಿನಿಧಿಗಳು, ಅಡ್ವೋಕೇಟ್ ಜನರಲ್ ಹಾಗೂ ಅಧಿಕಾರಿಗಳೊಂದಿಗೆ ವಿಶೇಷ ಸಭೆಯನ್ನು ಕರೆಯಲಾಗುವುದು ಎಂದು ಮುಖ್ಯಮಂತ್ರಿ. ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಇಂದು ಶಿವಮೊಗ್ಗದಲ್ಲಿ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಿಎಂ, ಅರಣ್ಯ ಸಮಸ್ಯೆಗಳಿಗೆ ಪರಿಹಾರ ಹುಡುಕುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ. ದಕ್ಷಿಣ ಕನ್ನಡ, ಉಡುಪಿ, ಕೊಡಗು, ಉತ್ತರ ಕನ್ನಡ, ಶಿವಮೊಗ್ಗ ಮತ್ತು ಚಿಕ್ಕಮಗಳೂರು, ಜಿಲ್ಲೆಗಳ ಮಲೆನಾಡು ಮತ್ತು ಅರೆ ಮಲೆನಾಡು ಪ್ರದೇಶಗಳ ಸಮಸ್ಯೆಗಳಿಗೆ ಕೆಲವು ಸ್ಪಷ್ಟನೆ ನೀಡಬೇಕು. ಕೆಲವು ಕಾನೂನಾತ್ಮಕ ಬದಲಾವಣೆಗಳನ್ನು ತರಬೇಕು. ಕೇಂದ್ರ ಸರ್ಕಾರ ನಿರ್ಣಯ ತೆಗೆದುಕೊಳ್ಳುವುದಿದೆ. ಅವೆಲ್ಲಕೂ ಕ್ರಮ ಜರುಗಿಸಲಾಗುವುದು ಎಂದು ಬೊಮ್ಮಾಯಿ ಹೇಳಿದ್ದಾರೆ.
ಕೆಲವು ವಿಷಯಗಳಿಗೆ ತಕ್ಷಣವೇ ಪರಿಹಾರ ನೀಡಲಾಗುವುದು. ಕೆಲವು ಸರ್ವೋಚ್ಚ ನ್ಯಾಯಾಲಯ ಹಾಗೂ ಕೇಂದ್ರ ಸರ್ಕಾರದಿಂದ ತೀರುವಳಿ ಪಡೆಯಲು ಪ್ರಯತ್ನ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.