ಮಂಗಳೂರು: ಲೋಕಸಭಾ ಚುನಾವಣಾ ಮತದಾನಕ್ಕೆ ನಕ್ಸಲ್ ಆತಂಕ ಎದುರಾಗದಂತೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಇಲಾಖೆ ವಿಶೇಷ ಕಟ್ಟೆಚ್ಚರ ವಹಿಸಿದೆ.
ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಯ ಗಡಿಭಾಗಗಳಲ್ಲಿ ಇತ್ತೀಚೆಗೆ ನಕ್ಸಲರು ಕಾಣಿಸಿಕೊಂಡಿದ್ದ ಹಿನ್ನೆಲೆಯಲ್ಲಿ
ನಕ್ಸಲ್ ಪೀಡಿತ ಪ್ರದೇಶಗಳಲ್ಲಿರುವ ಮತಗಟ್ಟೆಗಳಿಗೆ ಹೆಚ್ಚುವರಿ ಭದ್ರತಾ ವ್ಯವಸ್ಥೆ ಕಲ್ಪಿಸಲಾಗಿದೆ.
18 ನಕ್ಸಲ್ ಪೀಡಿತ ಪ್ರದೇಶಗಳ ಮತಗಟ್ಟೆಗಳನ್ನು ಗುರುತಿಸಿರುವ ಪೊಲೀಸ್ ಇಲಾಖೆ ಸಿಎಪಿಎಫ್ ಭದ್ರತೆ ಒದಗಿಸಿದೆ.ಅಲ್ಲದೇ ಪೊಲೀಸ್ ಇಲಾಖೆಯೊಂದಿಗೆ ನಕ್ಸಲ್ ನಿಗ್ರಹ ಪಡೆ ಕೂಡಾ ಕೂಂಬಿಂಗ್ ಕಾರ್ಯಾಚರಣೆಯಲ್ಲಿ ತೊಡಗಿದ್ದು, ಮತದಾರರು ಯಾವುದೇ ಆತಂಕ ಇಲ್ಲದೇ ಮತದಾನ ಮಾಡುವಂತೆ ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿ ಸಿ.ಬಿ. ರಿಷ್ಯಂತ್ ಮನವಿ ಮಾಡಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 1600 ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಮತಗಟ್ಟೆಯಲ್ಲಿ ನಿಯೋಜನೆ ಮಾಡಲಾಗಿದ್ದು, ಸಿಎಪಿಎಫ್, ಕೆಎಸ್ಆರ್ ಪಿ, ಹೋಮ್ ಗಾರ್ಡ್, ಎಎನ್ಎಫ್ ಮತ್ತು ಫಾರೆಸ್ಟ್ ಗಾರ್ಡ್ಸ್ ಗಳನ್ನು ಚುನಾವಣಾ ಭದ್ರತೆಗೆ ನಿಯೋಜಿಸಲಾಗಿದೆ.