ಮಂಗಳೂರು: ಕೆಲವು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಶಿರಾಡಿ ಘಾಟಿ ಸೇರಿದಂತೆ ಮಂಗಳೂರು ಮತ್ತು ಬೆಂಗಳೂರನ್ನು ಸಂಪರ್ಕಿಸುವ ಮುಖ್ಯ ಎರಡು ರಾಷ್ಟೀಯ ಹೆದ್ದಾರಿಗಳಲ್ಲಿ ಗುಡ್ಡ ಕುಸಿತದಿಂದ ವಾಹನ ಸಂಚಾರಕ್ಕೆ ತೊಡಕಾಗಿದೆ. ಹಾಗಾಗಿ ಮಂಗಳೂರು- ಬೆಂಗಳೂರು ನಡುವೆ ಹೆಚ್ಚುವರಿ ರೈಲು ಆರಂಭಿಸುವಂತೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ನೈಋತ್ಯ ರೈಲ್ವೆ ಜನರಲ್ ಮ್ಯಾನೇಜರ್ ಮತ್ತು ಮೈಸೂರು ಡಿಆರ್ಎಂ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದರು. ಇದೀಗ ಸಂಸದರ ಪತ್ರಕ್ಕೆ ಉತ್ತಮ ಸ್ಪಂದನೆ ದೊರೆತಿದ್ದು ರೈಲ್ವೇ ಅಧಿಕಾರಿಗಳು ಬೆಂಗಳೂರು ಮಂಗಳೂರು ನಡುವೆ ವಿಶೇಷ ರೈಲು ಓಡಿಸಲು ನಿರ್ಧರಿಸಿದ್ದಾರೆ,

ವಿಶೇಷ ರೈಲು ಸಂಚಾರದ ವಿವರ ಇಂತಿದೆ.
– ಜು. 19ರಂದು ರೈಲು ಸಂಖ್ಯೆ 06547 ಎಸ್ಬಿಸಿ ಬೆಂಗಳೂರಿನಿಂದ ಹೊರಡಲಿದೆ.
– ಜು.20ರಂದು ರೈಲು ಸಂಖ್ಯೆ 06548 ಮಂಗಳೂರು ಜಂಕ್ಷನ್ನಿಂದ ಯಶವಂತಪುರಕ್ಕೆ ತೆರಳಲಿದೆ.
– ಜು.21 ಹಾಗೂ 22ರಂದು ರೈಲು ಸಂಖ್ಯೆ 06549 ಯಶವಂತಪುರದಿಂದ ಮಂಗಳೂರು ಜಂಕ್ಷನ್ಗೆ ಬರಲಿದೆ.
– ಜು.21 ಹಾಗೂ 22 ರಂದು ರೈಲು ಸಂಖ್ಯೆ 06550 ಮಂಗಳೂರು ಜಂಕ್ಷನ್ನಿಂದ ಯಶವಂತಪುರಕ್ಕೆ ತೆರಳಲಿವೆ.

ಇನ್ನು ರೈಲ್ವೇ ಅಧಿಕಾರಿಗಳ ತುರ್ತು ಸ್ಪಂದನೆಗೆ ಸಂಸದರು ಧನ್ಯವಾದ ಅರ್ಪಿಸಿದ್ದಾರೆ.ಗುಡ್ಡ ಕುಸಿತದಿಂದ ಮಂಗಳೂರು-ಬೆಂಗಳೂರು ನಡುವೆ ರಸ್ತೆ ಸಂಪರ್ಕ ಕಡಿತಗೊಂಡಿದ್ದು, ತುರ್ತಾಗಿ ಹೆಚ್ಚುವರಿ ರೈಲು ಸೇವೆ ಒದಗಿಸುವಂತೆ ನನ್ನ ಮನವಿಗೆ ತಕ್ಷಣ ಸ್ಪಂದಿಸಿ ಆದೇಶ ಹೊರಡಿಸಿದ ನೈಋತ್ಯ ರೈಲ್ವೆ ಜನರಲ್ ಮ್ಯಾನೇಜರ್ ಮತ್ತು ಮೈಸೂರು ಡಿಆರ್ಎಮ್ ಅವರಿಗೆ ನನ್ನ ಧನ್ಯವಾದಗಳು ಎಂದು ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿದ್ದಾರೆ.