ಬೆಂಗಳೂರು: ಮಂಗಳೂರಿನ ಗುರುಪುರ – ನೇತ್ರಾವತಿ ನದಿಯಲ್ಲಿ ಮಂಗಳೂರು ವಾಟರ್ ಮೆಟ್ರೋ ಯೋಜನೆ ಕಾರ್ಯಗತ ಗೊಳಿಸುವ ಪ್ರಸ್ತಾವನೆಗೆ ರಾಜ್ಯ ಸರ್ಕಾರ ಅನುಮೋದನೆ ನೀಡಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಬುಧವಾರ ಬೆಂಗಳೂರಿನ ಸಿಎಂ ಅಧಿಕೃತ ನಿವಾಸ ಕಾವೇರಿಯಲ್ಲಿ ನಡೆದ ಕರ್ನಾಟಕ ಜಲಸಾರಿಗೆ ಮಂಡಳಿಯ ಸಭೆಯಲ್ಲಿ ಈ ಅನುಮೋದನೆ ನೀಡಲಾಗಿದೆ.
ಇದಲ್ಲದೇ, ಸಾಗರಮಾಲಾ ಯೋಜನೆಯ ಅಡಿಯಲ್ಲಿ ಮಂಗಳೂರಿನಲ್ಲಿ ಕರ್ನಾಟಕ ಜಲಸಾರಿಗೆ ತರಬೇತಿ ಕೇಂದ್ರವನ್ನು ಸ್ಥಾಪಿಸುವ ಪ್ರಸ್ತಾವನೆಗೆ ಕೂಡಾ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಒಪ್ಪಿಗೆ ನೀಡಿದ್ದಾರೆ.
ಇದೇ ವೇಳೆ, ರಾಜ್ಯದ ಬಂದರುಗಳ ಅಭಿವೃದ್ಧಿ, ಜಲಸಾರಿಗೆ ಯೋಜನೆಗಳ ಪ್ರಗತಿ ಮತ್ತು ಸರಕು ಸಾಗಣೆಗೆ ಅವಶ್ಯವಿರುವ ಮೂಲ ಸೌಲಭ್ಯಗಳ ಬಗ್ಗೆ ಕೂಡಾ ಸಭೆಯಲ್ಲಿ ಚರ್ಚಿಸಲಾಯಿತು.
ಪುನರ್ವಸತಿ, ಬಂದರು ಸಂಬಂಧಿತ ಕಾರ್ಯಾಚರಣೆಗಳಿಗೆ ಭೂಮಿ ಹಂಚಿಕೆ ಗುತ್ತಿಗೆ ಅವಧಿಯನ್ನು ಪರಿಶೀಲಿಸಿ ಪ್ರಸ್ತಾವನೆ ಸಲ್ಲಿಸಲು ಸಭೆಯಲ್ಲಿ ಅಧಿಕಾರಿಗಳಿಗೆ ಸೂಚಿಸಿದ ಸಿಎಂ, ಅತಿಕ್ರಮಣ ಮಾಡಿಕೊಂಡಿರುವವರನ್ನು ಕೂಡಲೇ ಎತ್ತಂಗಡಿ ಮಾಡುವಂತೆ ನಿರ್ದೇಶನ ನೀಡಿದ್ದಾರೆ.