ಬೆಂಗಳೂರು: ರಾಜ್ಯದ ಸುಮಾರು 16 ಲಕ್ಷ ಕುಟುಂಬಗಳ ಮಕ್ಕಳ ಪೌಷ್ಟಿಕಾಂಶ ಮತ್ತು ಶಾಲಾ ಪೂರ್ವ ಶಿಕ್ಷಣದ ಪ್ರಯೋಜನ ಪಡೆಯುವ ಹಾಗೂ 8100 ಮಹಿಳೆಯರಿಗೆ ಉದ್ಯೋಗಾವಕಾಶ ನೀಡುವಂತಹ 4244 ಅಂಗನವಾಡಿ ಕೇಂದ್ರಗಳನ್ನು ಪ್ರಾರಂಭಿಸಲು ಅಧಿಕೃತ ಆದೇಶವನ್ನು ರಾಜ್ಯ ಸರ್ಕಾರ ಹೊರಡಿಸಿದೆ.
ಇದಕ್ಕಾಗಿ 268.98 ಕೋಟಿ ರೂಪಾಯಿಗಳ ಅನುದಾನವನ್ನು ಮೀಸಲಿಡಲಾಗಿದ್ದು, ಶೀಘ್ರದಲ್ಲಿ ಅಂಗನವಾಡಿ ಕೇಂದ್ರಗಳನ್ನು ಪ್ರಾರಂಭಿಸಲಾಗಲಿವೆ.
ಕಡಿಮೆ ಆದಾಯದ ಜನಸಂಖ್ಯೆ ಹೆಚ್ಚಾಗಿ ವಾಸಿಸುವ, ವಲಸೆ ಮತ್ತು ಭೂಮಿ ರಹಿತ ಕಾರ್ಮಿಕರನ್ನು ಒಳಗೊಂಡಿರುವ ಗ್ರಾಮಾಂತರದಲ್ಲಿ 1655 ಮತ್ತು ನಗರ ಪ್ರದೇಶದಲ್ಲಿ 2589 ಅಂಗನವಾಡಿ ಕೇಂದ್ರಗಳ ಸ್ಥಾಪನೆಯಾಗಲಿದೆ.
ಪ್ರಧಾನಿ ನರೇಂದ್ರ ಮೋದಿ ಯವರ ಪೋಷಣ್ ಮಾಸಾಚರಣೆಯ ಘೋಷಣೆಯ ಬೆನ್ನಲ್ಲೇ ರಾಜ್ಯ ಸರ್ಕಾರದ ಅಧಿಕೃತ ಆದೇಶ ಹೊರಬಿದ್ದಿದೆ.
ಕರ್ನಾಟಕ ಅಂಗನವಾಡಿ ಮತ್ತು ಪೋಷನ್ ಅಭಿಯಾನ 2.0 ಎಂದು ಮರು ನಾಮಾಂಕಿತಗೊಂಡಿರುವ ಸಮಗ್ರ ಮಕ್ಕಳ ಅಭಿವೃದ್ದಿ ಯೋಜನೆಯನ್ನು 1975 ರಲ್ಲಿ ಪ್ರಾರಂಭಿಸಲಾಗಿತ್ತು.
ಪ್ರಸ್ತುತ ರಾಜ್ಯದಲ್ಲಿ ಈ ಯೋಜನೆಯ ಅಡಿಯಲ್ಲಿ ಒಟ್ಟು 66,361 ಅಂಗನವಾಡಿ ಕೇಂದ್ರಗಳು ಸ್ಥಾಪಿತವಾಗಿದ್ದು, ಅವುಗಳ ಮೂಲಕ ರಾಜ್ಯದ ಮಕ್ಕಳಿಗೆ, ಕಿಶೋರಿಯರಿಗೆ, ಗರ್ಭಿಣಿ ಸ್ತ್ರೀಯರಿಗೆ ಹಾಗೂ ಬಾಣಂತಿಯರಿಗೆ ಪೂರಕ ಪೌಷ್ಟಿಕ ಆಹಾರ, ಶಾಲಾ ಪೂರ್ವ ಶಿಕ್ಷಣ, ಪೌಷ್ಟಿಕತೆ ಮತ್ತು ಆರೋಗ್ಯ ಶಿಕ್ಷಣ ಮುಂತಾದ 6 ಸೇವೆಗಳನ್ನು ಒದಗಿಸಲಾಗುತ್ತಿದೆ.
ಪ್ರಸ್ತುತ ಈ ಯೋಜನೆಯ ಅಡಿ ಶೇಕಡಾ 56 ರಷ್ಟು ಫಲಾನುಭವಿಗಳಿಗೆ ಮಾತ್ರ ಸೌಲಭ್ಯ ನೀಡಲು ಸಾಧ್ಯವಾಗಿದೆ.
ಈ ಯೋಜನೆಯಿಂದ ಹೊರಗಿರುವ ಕಡಿಮೆ ಆದಾಯದ ಜನಸಂಖ್ಯೆಯು ವಾಸಿಸುವ ಪ್ರದೇಶಗಳು ಹೆಚ್ಚಾಗಿದ್ದು, ಅವರಿಗೆ 6 ಸೇವೆಗಳನ್ನು ಒದಗಿಸುವ ನಿಟ್ಟಿನಲ್ಲಿ ರಾಜ್ಯ ಸರಕಾರ ಮಹತ್ವದ ನಿರ್ಧಾರ ತಗೆದುಕೊಂಡಿದೆ.
ರಾಜ್ಯ ಸರಕಾರ ತನ್ನ ಅನುದಾನದಲ್ಲಿಯೇ ಈ ಹೊಸ ಅಂಗನವಾಡಿ ಕೇಂದ್ರಗಳನ್ನು ಪ್ರಾರಂಭಿಸುತ್ತಿದ್ದು, ಸಿಎಂ ಬಸವರಾಜ್ ಬೊಮ್ಮಾಯಿ ತಮ್ಮ ಅಮೃತ ಸ್ವಾತಂತ್ರೋತ್ಸವ ಭಾಷಣದಲ್ಲಿ ಘೋಷಣೆ ಮಾಡಿದ್ದರು.