ಮಧುರೈ: ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದ ಕುರಿತು ತಮಿಳುನಾಡು ವಿರುದ್ಧ ಹೇಳಿಕೆ ನೀಡಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ಮಧುರೈ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್ ಅವರು ಶೋಭಾ ಕರಂದ್ಲಾಜೆ ಅವರು ನೀಡಿದ ಶಂಕಿತ ಆರೋಪಿ ತಮಿಳುನಾಡಿನವನು ಎಂಬ ಹೇಳಿಕೆಯನ್ನು ಖಂಡಿಸಿ ಟ್ವಿಟ್ ಮಾಡಿದ್ದರು. ಅಲ್ಲದೆ ಶಾಂತಿ, ಸೌಹಾರ್ದತೆ ಮತ್ತು ರಾಷ್ಟ್ರೀಯ ಏಕತೆಗೆ ಧಕ್ಕೆ ಉಂಟು ಮಾಡುವ ಹೇಳಿಕೆ ನೀಡಿದವರ ವಿರುದ್ಧ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ಚುನಾವಣಾ ಆಯೋಗವನ್ನು ಮನವಿ ಮಾಡಿದ್ದರು.
ಇನ್ನು ಈ ಕುರಿತಂತೆ ಮಧುರೈನ ಕಡಚನೆಂತಲ್ನ ಸಿ ತ್ಯಾಗರಾಜನ್ ಶೋಭಾ ಕರಂದ್ಲಾಜೆ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ. ಇಂತಹ ಹೇಳಿಕೆಯು ತಮಿಳು ಮತ್ತು ಕನ್ನಡಿಗರ ನಡುವೆ ದ್ವೇಷ ಮತ್ತು ಅಸಮಾಧಾನ ಉಂಟುಮಾಡುತ್ತದೆ. ಹಾಗೆಯೇ ಅವರ ಹೇಳಿಕೆ ತಮಿಳು ಜನರನ್ನು ಭಯೋತ್ಪಾದಕರೆಂದು ಬಿಂಬಿಸುತ್ತದೆ ಎಂದು ದೂರುದಾರರು ಆರೋಪಿಸಿದ್ದಾರೆ.
ದೂರಿನ ಆಧಾರದ ಮೇಲೆ ಮಧುರೈ ನಗರದ ಸೈಬರ್ ಕ್ರೈಂ ಠಾಣೆ ಪೊಲೀಸರು, ಶೋಭಾ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.