ಮಂಗಳೂರು: ಹಿಂದೂ ಸಂಘಟನೆಯಿಂದ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಬಂದ್ ಗೆ ಕರೆ ಬೆನ್ನಲ್ಲೇ ಖಾಸಗಿ ಬಸ್ ಗಳ ಮೇಲೆ ಕಲ್ಲು ತೂರಾಟ ನಡೆದಿದೆ. ಯೂನಿವರ್ಸಿಟಿ ಕಾಲೇಜ್ ಬಳಿ ಖಾಸಗಿ ಬಸ್ ಗಳ ಮೇಲೆ ಕಲ್ಲು ತೂರಾಟ ನಡೆದಿದೆ.
ನಗರದ ಖಾಸಗಿ ಬಸ್ ಗಳ ಮೇಲೆ ದುಷ್ಕರ್ಮಿಗಳು ಕಲ್ಲು ತೂರಿದ್ದು, ಮೂರು ಬಸ್ ಗಳಿಗೆ ಹಾನಿಯಾಗಿದೆ. ಇಂದು ಮುಂಜಾನೆ ಚಲಿಸುತ್ತಿದ್ದ ಬಸ್ ಗೆ ದುಷ್ಕರ್ಮಿಗಳ ತಂಡ ಕಲ್ಲು ತೂರಿದ್ದು, ಈ ಹಿನ್ನೆಲೆ ನಗರದಲ್ಲಿ ಖಾಸಗಿ ಬಸ್ ಸಂಚಾರ ಸ್ಥಗಿತಗೊಂಡಿದೆ. ಮೇ.5ರ ಸಂಜೆ 6 ಗಂಟೆಯವರೆಗೆ ಈ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ.
ಬೆಂಗಳೂರಿನಿಂದ ಬಂದ ನಾಲ್ಕು ಬಸ್ಗಳಿಗೆ ಕಿಡಿಗೇಡಿಗಳು ನಸುಕಿನಲ್ಲಿ ಕಲ್ಲೆಸೆದಿದ್ದಾರೆ. ಇದರ ಬೆನ್ನಲ್ಲೇ ಕೆಎಸ್ಆರ್ಟಿಸಿ ಬಸ್ ಸಂಚಾರವನ್ನು ಸ್ಥಗಿತಗೊಳಿಸಿದೆ. ಪಂಪ್ವೆಲ್ ಬಳಿ ನಾಲ್ಕು ಬಸ್ಗಳಿಗೆ ಕಲ್ಲು ತೂರಾಟ ನಡೆಸಲಾಗಿದೆ. ಪ್ರಯಾಣಿಕರಿಗೆ ತೊಂದರೆಯಾಗಿಲ್ಲ, ಬಸ್ಗಳ ಗಾಜು ಒಡೆದಿವೆ. ಹಾಗಾಗಿ ಬಸ್ ಸಂಚಾರ ಸ್ಥಗಿತಗೊಳಿಸಿದ್ದೇವೆ ಎಂದು ಕೆಎಸ್ಆರ್ಟಿಸಿ ಮಂಗಳೂರು ವಿಭಾಗದ ವಿಭಾಗೀಯ ನಿಯಂತ್ರಕ ರಾಜೇಶ್ ಶೆಟ್ಟಿ ತಿಳಿಸಿದ್ದಾರೆ.
ಪಿ.ಯು. ಗಣಿತ ಪರೀಕ್ಷೆ- 2 ಶುಕ್ರವಾರ ನಿಗದಿಯಾಗಿತ್ತು. ಪರೀಕ್ಷಾ ಕೇಂದ್ರಗಳಿಗೆ ತಲುಪಲು ಸಾಧ್ಯವಾಗದೇ ವಿದ್ಯಾರ್ಥಿಗಳು ಸಮಸ್ಯೆ ಎದುರಿಸಿದರು. ಬಹುತೇಕ ಅಂಗಡಿಗಳು ಮುಚ್ಚಿದ್ದು ನಗರದಲ್ಲಿ ಜನಸಂಚಾರ ವಿರಳವಾಗಿದೆ. ರಸ್ತೆಗಳು ಜನರಿಲ್ಲದೆ ಬಿಕೋ ಎನ್ನುತ್ತಿವೆ.


