ಮಂಡ್ಯ: ‘ರಾಜಕಾರಣದಲ್ಲಿ ಯಾವುದೇ ಡೆಡ್ ಲೈನ್ ಹಾಕಿಕೊಂಡು ಕೆಲಸ ಮಾಡಲು ಆಗುವುದಿಲ್ಲ. ರಾಜಕಾರಣ ನಿರಂತರ ಕಲಿಕಾ ಕ್ಷೇತ್ರವಾಗಿದ್ದು ನಾನು ಅದೇ ದಾರಿಯಲ್ಲಿ ಸಾಗುತ್ತಿದ್ದೇನೆ ಎಂದು ಮಂಡ್ಯ ಲೋಕಸಭಾ ಕ್ಷೇತ್ರದ ಸಂಸದೆ ಸುಮಲತಾ ಅಂಬರೀಶ್ ಹೇಳಿದರು.
ಇವರು ಇಂದು ಮಂಡ್ಯ ಜಿಲ್ಲೆ ಮದ್ದೂರಿನಲ್ಲಿ ಅಂಬರೀಶ್ ಹುಟ್ಟುಹಬ್ಬದ ಅಂಗವಾಗಿ ಆಶಾ ಕಾರ್ಯಕರ್ತೆಯರಿಗೆ ಆಹಾರದ ಕಿಟ್ ವಿತರಿಸಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಲೋಕಸಭಾ ಸದಸ್ಯೆಯಾದ ಒಂದು ವರ್ಷದ ಅವಧಿಯಲ್ಲಿ ಸಂಸದರ ನಿಧಿ ಬಳಕೆಯಲ್ಲಿ ಮಂಡ್ಯ ಜಿಲ್ಲೆ ಪ್ರಥಮ ಸ್ಥಾನದಲ್ಲಿದೆ. ಇದು ಕಾರ್ಯವೈಖರಿಯನ್ನು ತಿಳಿಸುತ್ತದೆ ಎಂದು ಹೇಳಿದ್ದಾರೆ.
ಜಿಲ್ಲೆಯಲ್ಲಿ ಕೋವಿಡ್ 19 ಸೋಂಕು ಹೆಚ್ಚಾಗಿ ಹರಡಿಲ್ಲ. ಮುಂಬೈನಿಂದ ಬಂದವರಲ್ಲಿ ಮಾತ್ರ ಸೋಂಕು ಕಾಣಿಸಿಕೊಂಡಿದೆ. ಅದು ಜಿಲ್ಲಾದ್ಯಂತ ಹರಡದಂತೆ ಮುನ್ನೆಚ್ಚರಿಕೆ ವಹಿಸಿದ್ದ ಕಾರಣ ಹೆಚ್ಚಿನ ಅನಾಹುತಗಳು ಸಂಭವಿಸಿಲ್ಲ. ಕೋವಿಡ್ 19 ನಿಯಂತ್ರಣ ಕುರಿತಂತೆ ಜಿಲ್ಲಾಧಿಕಾರಿ ಹಾಗೂ ಅಧಿಕಾರಿ ವರ್ಗ ಹೆಚ್ಚು ಜವಾಬ್ದಾರಿಯಿಂದ ಕೆಲಸ ಮಾಡಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.