ಬೆಂಗಳೂರು: ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಶಾಲೆಗಳಿಗೆ ಬೇಸಿಗೆ ರಜೆ ಅವಧಿ ವಿಸ್ತರಿಸಲಾಗಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. ಕೊವಿಡ್ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಶಾಲೆಗಳನ್ನು ಮುಚ್ಚಲಾಗಿದ್ದು, ಪ್ರಸಕ್ತ ಸನ್ನಿವೇಶವನ್ನು ಗಮನದಲ್ಲಿರಿಸಿ 2020-21 ನೇ ಸಾಲಿನ ರಜಾವಧಿಯನ್ನು ಪರಿಷ್ಕರಿಸಲಾಗಿದೆ ಎಂದು ಹೇಳಿದ್ದಾರೆ.
ಬೇಸಿಗೆ ರಜೆಯ ಕುರಿತಾಗಿ ಶಿಕ್ಷಣ ಇಲಾಖೆ ಹೊರಡಿಸಿರುವ ಸುತ್ತೋಲೆ ಬಗ್ಗೆ ಮಾತನಾಡಿದ ಸಚಿವ ಸುರೇಶ್ ಕುಮಾರ್, ಪ್ರಾಥಮಿಕ ಶಾಲೆಗಳಿಗೆ ಜೂನ್ 14ರವರೆಗೂ ಹಾಗೂ ಪ್ರೌಢ ಶಾಲೆಗಳಿಗೆ ಮೇ 31ರವರೆಗೂ ಬೇಸಿಗೆ ರಜೆ ಘೋಷಣೆ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಪ್ರೌಢ ಶಾಲೆಯ ಶಿಕ್ಷಕರು ರಜೆಯ ಅವಧಿಯಲ್ಲಿ ಎಸ್ಎಸ್ಎಲ್ಸಿ ಮಕ್ಕಳ ಪರೀಕ್ಷಾ ಸಿದ್ಧತೆ ಬಗ್ಗೆ ಗಮನ ಹರಿಸಬೇಕು. ವಿದ್ಯಾರ್ಥಿಗಳ ಜತೆ ದೂರವಾಣಿ ಸಂಪರ್ಕದಲ್ಲಿರಬೇಕು. ಶಿಕ್ಷಕರು ವಿದ್ಯಾರ್ಥಿಗಳಿಗೆ ಕಲಿಕೆ ಬಗ್ಗೆ ಪ್ರೇರೇಪಿಸಬೇಕು. ಜೂನ್ 1ರಿಂದ 14ರವರೆಗೆ SSLC ವಿದ್ಯಾರ್ಥಿಗಳಿಗೆ ಪುನರ್ಮನನ ತರಗತಿ ಆರಂಭವಾಗುತ್ತದೆ. ಇನ್ನು ಜೂನ್ 15ರಿಂದ 8 ಮತ್ತು 9ನೇ ತರಗತಿಗಳು ಪ್ರಾರಂಭವಾಗುತ್ತದೆ. ಈ ಕುರಿತಂತೆ ರಾಜ್ಯ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ ಎಂದು ತಿಳಿಸಿದ್ದಾರೆ.