ಬೆಂಗಳೂರು: ಲೋಕಸಭಾ ಚುನಾವಣೆ ಬಳಿಕ ಕಾಂಗ್ರೆಸ್ ಪಕ್ಷ ತನ್ನದೇ ಭಾರದಿಂದ ಕುಸಿದು ಬೀಳುತ್ತದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಕಾರ್ಕಳ ಶಾಸಕ ಸುನೀಲ್ ಕುಮಾರ್ ಹೇಳಿದ್ದಾರೆ.
ಬೆಂಗಳೂರಿನ ಮಲ್ಲೇಶ್ವರಂನ ಬಿಜೆಪಿ ರಾಜ್ಯ ಕಚೇರಿಯಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸುನೀಲ್ ಕುಮಾರ್, ಕಾಂಗ್ರೆಸ್ ನಲ್ಲಿ ಬಹಳ ದೊಡ್ಡ ಪ್ರಮಾಣದ ಗೊಂದಲ ಇದ್ದು, ಸಿದ್ದರಾಮಯ್ಯ ವರುಣಾ ಕ್ಷೇತ್ರದಲ್ಲಿ ಮಾಡಿದ ಭಾಷಣ ಇದಕ್ಕೆ ಜ್ವಲಂತ ಉದಾಹರಣೆ ಎಂದು ಹೇಳಿದ್ದಾರೆ.
ಅಲ್ಲದೇ, ಕಾಂಗ್ರೆಸ್ ಪಕ್ಷ ಮನೆಯೊಂದು ನಾಲ್ಕು ಬಾಗಿಲು ಆಗಿದ್ದು, ಸರ್ಕಾರ ಪತನ ಆಗಬೇಕು ಅಂತಾ ನಾವು ಬಯಸುವುದಿಲ್ಲ, ಆದರೆ ಅವರ ಭಾರದಲ್ಲಿ ಅವರು ಕುಸಿದರೆ ಮುಂದೇನು ಪೂರಕವಾಗಿ ಮಾಡಬೇಕು ಅಂತಾ ನಾವು ನೋಡುತ್ತೇವೆ ಎಂದಿದ್ದಾರೆ
ಇದೇ ವೇಳೆ ಕಾಂಗ್ರೆಸ್ ಪಕ್ಷದಲ್ಲಿ ಅಲ್ಲಿ ಅಭದ್ರತೆ ಮತ್ತು ಸೋಲಿನ ಭಯ ಉಂಟಾದಾಗ ಕಾಂಗ್ರೆಸ್ ಶಾಸಕರು ನಮ್ಮ ಸಂಪರ್ಕಕ್ಕೆ ಬರುತ್ತಾರೆ ಎಂದೂ ಸುನೀಲ್ ಕುಮಾರ್ ಹೇಳಿದ್ದಾರೆ.
ಈ ಮಧ್ಯೆ ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಪಕ್ಷ ಜೆಡಿಎಸ್ ನಿಂದ ಉತ್ತಮ ಸಹಕಾರ ದೊರೆತಿದ್ದು, ವಿಧಾನಸಭಾ ಚುನಾವಣೆಯಲ್ಲೂ ಮೈತ್ರಿ ಮುಂದುವರಿಯಲಿದೆ ಎಂದು ಸುನೀಲ್ ಕುಮಾರ್ ಸ್ಪಷ್ಟಪಡಿಸಿದ್ದಾರೆ


