ಚೆನ್ನೈ: ತಮಿಳುನಾಡು ಬಿಜೆಪಿ ಘಟಕದ ಉಪಾಧ್ಯಕರಾಗಿರುವ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಸದ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಚಾರದಲ್ಲಿ ಭಾಗಿಯಾಗಿದ್ದಾರೆ. ಈ ಸಂದರ್ಭದಲ್ಲಿ ಅವರ ಜೀವಕ್ಕೆ ಬೆದರಿಕೆ ಇರುವ ಬಗ್ಗೆ ಗುಪ್ತಚರ ಇಲಾಖೆ ಮಾಹಿತಿ ಸಿಕ್ಕಿದೆ.
ಅಣ್ಣಾಮಲೈ ಅವರಿಗೆ ಜೀವಬೆದರಿಕೆ ಕರೆಗಳು ಬರುತ್ತಿರುವ ಹಿನ್ನಲೆಯಲ್ಲಿ ಅವರಿಗೆ ವೈ ಪ್ಲಸ್ ಭದ್ರತೆ ನೀಡಲಾಗಿದೆ. ಕೆಲ ಮಾವೋವಾದಿ ಮತ್ತು ಪಿಎಫ್ಐ ಗುಂಪುಗಳಿಂದ ಬೆದರಿಕೆ ಬರುತ್ತಿರುವುದಾಗಿ ತಿಳಿದುಬಂದಿದೆ. ವೈ ಪ್ಲಸ್ ಭದ್ರತೆ ಹಿನ್ನೆಲೆಯಲ್ಲಿ ಸದ್ಯ ಅವರ ಭದ್ರತೆಗೆ 11 ಜನ ಕಮಾಂಡೋಗಳು ಮತ್ತು ಇಬ್ಬರು ಗನ್ ಮ್ಯಾನ್ ಇರಲಿದ್ದು, ಅವರ ನಿವಾಸಕ್ಕೆ ಒಬ್ಬರು ಭದ್ರತೆಯನ್ನು ನಿಯೋಜಿಸಲಾಗಿದೆ.
10 ವರ್ಷಗಳ ಸುದೀರ್ಘ ಸೇವೆ ಸಲ್ಲಿಸಿದ ಬಳಿಕ ಅವರು ಮೇ 2019ರಲ್ಲಿ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದರು. ಬಳಿಕ ಬಿಜೆಪಿ ಪಕ್ಷ ಸೇರಿದ ಅವರು ತಮಿಳುನಾಡಿನಲ್ಲಿ ಸಕ್ರಿಯ ರಾಜಕಾರಣಿಯಾಗಿ ಗುರಿತಿಸಿಕೊಳ್ಳುತ್ತಿದ್ದಾರೆ. ಇತ್ತೀಚೆಗೆ ಬಾಲಿವುಡ್ ನಟಿ ಕಂಗನಾ ರಾನೌತ್ ಹಾಗೂ ಭಾರತದ ಮುಖ್ಯ ನ್ಯಾಯಾಮೂರ್ತಿ ಎಸ್ಎ ಬೊಬ್ಡೇ ಅವರಿಗೂ ಕೂಡ ವೈ ಪ್ಲಸ್ ಭದ್ರತೆಯನ್ನು ನೀಡಲಾಗಿದೆ.