ಉಪ್ಪಿನಂಗಡಿ: ಟ್ಯಾಂಕರೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿಯಾಗಿ ದ್ವಿಚಕ್ರ ವಾಹನದಲ್ಲಿದ್ದ ಮಗು ಸಹಿತ ದಂಪತಿಗೆ ಗಂಭೀರ ಗಾಯಗಳಾಗಿರುವ ಘಟನೆ ಉಪ್ಪಿನಂಗಡಿ ಸಮೀಪದ ನೆಕ್ಕಿಲಾಡಿಯಲ್ಲಿ ನಡೆದಿದೆ.
ದ್ವಿಚಕ್ರ ವಾಹನದಲ್ಲಿದ್ದ ಮುಹಮ್ಮದ್ ಶರೀಫ್, ಅವರ ಪತ್ನಿ ಆಯೀಷಾ ತಸ್ಲೀಮಾ ಹಾಗೂ ಮಗು ಮುಹಮ್ಮದ್ ರಫೀ ಗಾಯಗೊಂಡವರು.
ಮಹಮ್ಮದ್ ಶರೀಫ್ ಅವರ ಕಾಲಿಗೆ ಹಾಗೂ ಆಯೀಷಾ ತಸ್ಲೀಮಾ ಅವರ ತಲೆಗೆ ಗಂಭೀರ ಗಾಯಗಳಾಗಿದ್ದು, ಮಗು ಸಣ್ಣಪುಟ್ಟ ಗಾಯಗಳಿಂದ ಅಪಾಯದಿಂದ ಪಾರಾಗಿದೆ. ಗಾಯಾಳುಗಳನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
34 ನೆಕ್ಕಿಲಾಡಿಯ ಫ್ಲೈ ಓವರ್ ಬಳಿ ಈ ಅಪಘಾತ ಸಂಭವಿಸಿದ್ದು, ವಾಹನವೊಂದನ್ನು ಓವರ್ ಟೇಕ್ ಮಾಡಿಕೊಂಡು ರಸ್ತೆಯ ವಿರುದ್ಧ ದಿಕ್ಕಿನಲ್ಲಿ ಬಂದ ಟ್ಯಾಂಕರ್ ಎದುರಿನಿಂದ ಬಂದ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತ ನಡೆದ ಬಳಿಕ ಚಾಲಕ ಟ್ಯಾಂಕರ್ ನಿಂದ ಇಳಿದು ಓಡಲು ಯತ್ನಿಸಿದ್ದು, ಸಾರ್ವಜನಿಕರು ಆತನನ್ನು ಹಿಡಿದು ಪೊಲೀಸರಿಗೊಪ್ಪಿಸಿದ್ದಾರೆ. ಪುತ್ತೂರು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.