ಮಂಗಳೂರು: ಮಂಗಳೂರು ದಸರಾ ಹಾಗೂ ನವರಾತ್ರಿ ಹಬ್ಬದ ಕುರಿತು ದೇವಸ್ಥಾನಗಳ ಆಡಳಿತ ಮಂಡಳಿ ಹಾಗೂ ಅಧಿಕಾರಿ ವರ್ಗದ ಸಭೆ ಮಂಗಳೂರಿನಲ್ಲಿ ನಡೆಯಿತು.
ಮುಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ದಸರಾ ಸೇರಿದಂತೆ ಮಂಗಳೂರು ನಗರದೆಲ್ಲೆಡೆ ಆಚರಿಸಲ್ಪಡುವ ನವರಾತ್ರಿ ಉತ್ಸವದ ಸಂದರ್ಭದಲ್ಲಿ ಆಡಳಿತ ವ್ಯವಸ್ಥೆ ಸಹಕಾರ ನೀಡುವ ಬಗ್ಗೆ ಚರ್ಚೆ ನಡೆಸಲಾಗಿದೆ.
ವಿದ್ಯುತ್ ದೀಪಾಲಂಕಾರ, ಕಸ ವಿಲೇವಾರಿ, ಶೋಭಾಯಾತ್ರೆ ಸಾಗುವ ರಸ್ತೆ, ದೇವಸ್ಥಾನಗಳ ಪರಿಸರದಲ್ಲಿ ಸ್ವಚ್ಛತೆ ಕುರಿತಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದ್ದು, ಹಬ್ಬದ ಸಂದರ್ಭದಲ್ಲಿ ವಿದ್ಯುತ್ ಪೂರೈಕೆಗೆ ತೊಡಕಾಗದಂತೆ ಕಾರ್ಯ ನಿರ್ವಹಿಸಲು ಮೆಸ್ಕಾಂ ಅಧಿಕಾರಿಗಳಿಗೆ ಸೂಚಿಸಲಾಗಿದೆ.
ಅಗ್ನಿಶಾಮಕ ದಳ, ಪೊಲೀಸ್ ಇಲಾಖೆ ಹಾಗೂ ಆರೋಗ್ಯ ಇಲಾಖೆ ಕೂಡ ಹಬ್ಬದ ದೃಷ್ಟಿಯಿಂದ ಕಾರ್ಯ ಪ್ರವೃತರಾಗಬೇಕು ಮತ್ತು ದಸರಾ ಹಬ್ಬದಲ್ಲಿ ಪಾಲ್ಗೊಳ್ಳಲು ಆಗಮಿಸುವ ಪ್ರವಾಸಿಗರು, ಭಕ್ತರಿಗೆ ಸಮಸ್ಯೆ ಆಗದಂತೆ ಸಂಬಂಧಪಟ್ಟ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಶಾಸಕ ವೇದವ್ಯಾಸ ಕಾಮತ್ ನಿರ್ದೇಶನ ನೀಡಿದ್ದಾರೆ.
ಸಭೆಯಲ್ಲಿ ಮಂಗಳೂರು ಮಹಾನಗರ ಪಾಲಿಕೆ ಉಪಮಹಾಪೌರರು, ಪಾಲಿಕೆ ಸದಸ್ಯರು, ವಿವಿಧ ದೇವಸ್ಥಾನಗಳ ಆಡಳಿತ ಮಂಡಳಿ ಸದಸ್ಯರು, ಶಾರದಾ ಮಹೋತ್ಸವ ಸಮಿತಿಯ ಪ್ರಮುಖರು, ಪೊಲೀಸ್ ಇಲಾಖೆ, ಸಂಚಾರಿ ಪೊಲೀಸ್, ಅಗ್ನಿಶಾಮಕ ದಳ, ಮೆಸ್ಕಾಂ, ಮಂಗಳೂರು ಮಹಾನಗರ ಪಾಲಿಕೆಯ ಅಧಿಕಾರಿಗಳು ಉಪಸ್ಥಿತರಿದ್ದರು.