ಬೆಂಗಳೂರು: ಬಿಜೆಪಿ ಕಾರ್ಯಕರ್ತ ಮತ್ತು ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರ ಕುಟುಂಬಕ್ಕೆ ವೈಯಕ್ತಿಕವಾಗಿ 10 ಲಕ್ಷ ರೂಪಾಯಿ ನೆರವು ನೀಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಇಂದು ಮಾತನಾಡಿದ ಡಾ. ಅಶ್ವಥ್ ನಾರಾಯಣ, ‘ಇದನ್ನು ನೆರವು ಎಂದು ಹೇಳಲು ಇಷ್ಟ ಪಡುವುದಿಲ್ಲ. ಇದು ನನ್ನ ಕರ್ತವ್ಯ ವಾಗಿದೆ ಎಂದು ತಿಳಿಸಿದ್ದಾರೆ.
10 ಲಕ್ಷ ರೂಪಾಯಿಗಳ ಚೆಕ್ ಅನ್ನು ಪ್ರವೀಣ್ ಅವರ ಕುಟುಂಬಕ್ಕೆ ತಲುಪಿಸಲಾಗುವುದು. ಅವರ ಬಲಿದಾನಕ್ಕೆ ನಾವು ಬೆಲೆ ಕಟ್ಟಲು ಸಾಧ್ಯವಿಲ್ಲ ಎಂದು ಸಚಿವ ಅಶ್ವಥ್ ನಾರಾಯಣ ಹೇಳಿದ್ದಾರೆ.
ಅಲ್ಲದೇ ಪ್ರವೀಣ್ ಅವರ ಹಂತಕರು ಎಲ್ಲೇ ಇದ್ದರೂ ಕಠಿಣ ಕ್ರಮ ಜರುಗಿಸಲಾಗುವುದು. ಪಕ್ಷದ ಕಾರ್ಯಕರ್ತರ ಆಕ್ರೋಶ ನನಗೆ ಅರ್ಥವಾಗುತ್ತದೆ. ಅಪರಾಧಿಗಳ ಹೆಡೆಮುರಿ ಕಟ್ಟುವ ಶಕ್ತಿ ಬಿಜೆಪಿ ಸರಕಾರಕ್ಕಿದೆ ಎಂದು ಸಚಿವರು ಪ್ರತಿಕ್ರಿಯಿಸಿದ್ದಾರೆ.
ಕೆಲವು ತಿಂಗಳ ಹಿಂದೆ ಶಿವಮೊಗ್ಗದಲ್ಲಿ ಹತ್ಯೆಯಾದ ಹರ್ಷನ ಕುಟುಂಬಕ್ಕೂ ಸಚಿವ ಡಾ. ಅಶ್ವಥ್ ನಾರಾಯಣ ವೈಯಕ್ತಿಕ ನೆರವು ನೀಡಿದ್ದರು.