ಬೆಂಗಳೂರು: ಸಿಎಂ ಬಸವರಾಜು ಬೊಮ್ಮಾಯಿ ಕೂಡಾ ʻಆಪರೇಷನ್ ಮತದಾರರ ಪಟ್ಟಿ ಪರಿಷ್ಕರಣೆ’ ಹಗರಣದಲ್ಲಿ ಭಾಗಿಯಾಗಿದ್ದಾರೆ. ಹೀಗಾಗಿ ತಕ್ಷಣ ರಾಜೀನಾಮೆ ನೀಡಬೇಕು ಮತ್ತು ಮುಖ್ಯಮಂತ್ರಿಗಳು ಸೇರಿದಂತೆ ಪ್ರಕರಣದಲ್ಲಿ ಭಾಗಿಯಾಗಿರುವ ಎಲ್ಲ ಅಧಿಕಾರಿಗಳನ್ನು ತಕ್ಷಣ ಬಂಧಿಸಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮೂಲಕ ಆಗ್ರಹಿಸಿದ್ದಾರೆ.
ಆಪರೇಷನ್ ಕಮಲದ ಮುಂದುವರಿದ ಭಾಗವಾದ “ಆಪರೇಷನ್ ಮತದಾರರ ಪಟ್ಟಿ ಪರಿಷ್ಕರಣೆ’ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಬುಡಮೇಲು ಮಾಡುವ ಗಂಭೀರ ಅಪರಾಧ ಪ್ರಕರಣ. ಈ ಬಗ್ಗೆ ರಾಜ್ಯ ಹೈಕೋರ್ಟ್ ಮುಖ್ಯನ್ಯಾಯಮೂರ್ತಿಯವರ ಉಸ್ತುವಾರಿಯಲ್ಲಿಯೇ ನ್ಯಾಯಾಂಗ ತನಿಖೆ ಮಾಡಬೇಕು. ಈ ಪ್ರಕರಣವನ್ನು ಸೂಕ್ಷ್ಮವಾಗಿ ಅವಲೋಕಸಿದರೆ ರಾಜ್ಯ ಬಿಜೆಪಿ ಸರ್ಕಾರ ಮತ್ತು ಬಿಬಿಎಂಪಿ ಮಾತ್ರವಲ್ಲ ಚುನಾವಣಾ ಆಯೋಗ ಕೂಡಾ ಈ ಹೀನ ಕೃತ್ಯದಲ್ಲಿ ಭಾಗಿಯಾಗಿರುವ ಗುಮಾನಿಗಳಿವೆ. ಕೇಂದ್ರ ಚುನಾವಣಾ ಆಯೋಗ ಕೂಡಾ ಇದನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸಬೇಕು. ಮತದಾರರ ಪಟ್ಟಿಯ ಅಕ್ರಮ ಪರಿಷ್ಕರಣೆಯ ಹಗರಣ ನಡೆಸಿದ ಸಂಸ್ಥೆಯ ಹೆಸರು ಬಿಜೆಪಿಯ ಸಚಿವರೊಬ್ಬರ ಒಡೆತನದ ಸಂಸ್ಥೆಯ ಹೆಸರಿನ ಜೊತೆ ತಾಳೆಯಾಗುವುದು ಕಾಕತಾಳೀಯವಾಗಿರಲಾರದು. ಅದೇ ರೀತಿ ಸಂಸ್ಥೆಯ ಕಚೇರಿ ಇರುವ ಸ್ಥಳದ ಸಮೀಪದಲ್ಲಿಯೇ ಈ ಸಂಶಯಿತ ಸಚಿವರ ಸಂಸ್ಥೆಗಳೂ ಇರುವುದು ಸಂಶಯವನ್ನು ಇನ್ನಷ್ಟು ಬಲಪಡಿಸುತ್ತದೆ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.