ಪುತ್ತೂರು: ಬಡಗನ್ನೂರು ಗ್ರಾಮದ ಸಾರೆಪ್ಪಾಡಿ ಮೂಲದ ಕೃಷಿಕನೋರ್ವ ಕಾಳು ಮೆಣಸು ಕೊಯ್ಯುತ್ತಿದ್ದ ವೇಳೆ ಆಕಸ್ಮಿಕವಾಗಿ ಬಿದ್ದು ಗಾಯಗೊಂಡು ಪುತ್ತೂರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ವ್ಯಕ್ತಿಯ ಆರೋಗ್ಯ ಮತ್ತಷ್ಟು ಉಲ್ಬಣಿಸಿದ ಹಿನ್ನೆಲೆಯಲ್ಲಿ ಗಾಯಾಳು ಕಡೆಯವರು ಆಸ್ಪತ್ರೆ ಮುಂಭಾಗ ಜಮಾಯಿಸಿ ಸಿಬಂದಿಗಳನ್ನು ತರಾಟೆಗೆ ತೆಗೆದುಕೊಂಡ ಘಟನೆ ಸಂಭವಿಸಿದೆ.
ಬಡಗನ್ನೂರು ಗ್ರಾಮದ ಸಾರೆಪ್ಪಾಡಿ ನಿವಾಸಿ, ಕೃಷಿಕ ಗಂಗಾಧರ ಗೌಡ (62) ಆಸ್ಪತ್ರೆಗೆ ದಾಖಲಾಗಿದ್ದರು.
ಘಟನೆಯ ವಿವರ: ಜ. 10ರಂದು ಕಾಳು ಮೆಣಸು ಕೊಯ್ಯುತ್ತಿರುವ ಸಂದರ್ಭದಲ್ಲಿ ಅವರು ಆಕಸ್ಮಿಕವಾಗಿ ಬಿದ್ದು ಗಾಯಗೊಂಡಿದ್ದರು. ಅವರನ್ನ ಚಿಕಿತ್ಸೆಗಾಗಿ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಜ. 11ರಂದು ಕಾಲಿನ ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿ ನಡೆದು ಅವರು ಆರೋಗ್ಯದಿಂದಿದ್ದರು. ಅನಂತರ ಅವರ ಆರೋಗ್ಯದಲ್ಲಿ ದಿನೇ ದಿನೇ ಏರುಪೇರು ಉಂಟಾಗಿ ಸ್ಥಿತಿ ಗಂಭೀರವಾಗಿತ್ತು. ಇದಕ್ಕೆ ಆಸ್ಪತ್ರೆಯ ನಿರ್ಲಕ್ಷ್ಯ ಕಾರಣ ಎಂದು ಗಾಯಾಳುವಿನ ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗಂಭೀರ ಸ್ಥಿತಿಯಲ್ಲಿದ್ದ ಗಾಯಾಳುವನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಿಸಿ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಯಿತು.
ಈ ಸಂಬಂಧ ಗಾಯಾಳುವಿನ ಕಡೆಯ ಹಲವರು ಆಸ್ಪತ್ರೆಯ ಮುಂಭಾಗದಲ್ಲಿ ಜಮಾಯಿಸಿದ್ದು, ಈ ಸಂದರ್ಭದಲ್ಲಿ ಚಿಕಿತ್ಸೆಯ ಬಿಲ್ ಪಾವತಿ ವಿಚಾರದಲ್ಲಿ ಆಸ್ಪತ್ರೆಯವರಿಗೆ ಹಾಗೂ ರೋಗಿಯ ಕಡೆಯವರ ನಡುವೆ ಮಾತಿನ ಚಕಮಕಿಯೂ ನಡೆಯಿತು. ನಗರ ಠಾಣೆಯ ಇನ್ಸ್ಪೆಕ್ಟರ್ ಜಾನ್ಸನ್ ಡಿ’ಸೋಜಾ, ಎಸ್ಐ ಆಂಜನೇಯ ರೆಡ್ಡಿ ಹಾಗೂ ಸಿಬಂದಿ ಆಗಮಿಸಿ ಪರಿಸ್ಥಿತಿಯನ್ನು ಹತೋಟಿಗೆ ತಂದರು.