ಮಂಗಳೂರು: ಸಮಾಜ ಕಲ್ಯಾಣ ಇಲಾಖೆಯ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ಇಂದು ನಗರದ ಕೆಎಂಸಿ ಆಸ್ಪತ್ರೆಗೆ ಆಗಮಿಸಿ ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ಅವರ ಆರೋಗ್ಯ ವಿಚಾರಿಸಿ, ಆಸ್ಪತ್ರೆಯ ಸಂಪೂರ್ಣ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಭರವಸೆ ನೀಡಿದರು.
ಉಸಿರಾಟದ ತೊಂದರೆ ಹಾಗೂ ಹೃದಯ ಸಂಬಂಧಿ ಕಾಯಿಲೆಯಿಂದ ಸುಕ್ರಿ ಬೊಮ್ಮಗೌಡ ಅವರು ಶಸ್ತ್ರಚಿಕಿತ್ಸೆಗೆ ಒಳಗಾಗಿ ಐಸಿಯುನಲ್ಲಿದ್ದರು. ಇದೀಗ ಆರೋಗ್ಯದಲ್ಲಿ ಸುಧಾರಿಕೆ ಕಂಡು ಬಂದಿರುವ ಹಿನ್ನೆಲೆಯಲ್ಲಿ ಅವರನ್ನು ವಾರ್ಡ್ ಗೆ ಶಿಫ್ಟ್ ಮಾಡಲಾಗಿದೆ. ಆಸ್ಪತ್ರೆಗೆ ಭೇಟಿ ನೀಡಿದ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ಆರೋಗ್ಯ ವಿಚಾರಣೆ ಮಾಡಿದರು.
ಬಳಿಕ ಮಾತನಾಡಿದ ಅವರು,ಸಿಎಂ ಬಸವರಾಜ ಬೊಮ್ಮಾಯಿಯವರು ಸುಕ್ರಜ್ಜಿಯ ಆರೋಗ್ಯ ವಿಚಾರಿಸಲು ಹೇಳಿದ್ದರು. ಅದರಂತೆ ಇಂದು ಅವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದೇನೆ ಸುಕ್ರಜ್ಜಿಯ ಆಸ್ಪತ್ರೆಯ ವೆಚ್ಚವನ್ನು ಸರ್ಕಾರ ಭರಿಸಲಿದೆ. ಅವರಿಗೆ ಸಕಾಲದಲ್ಲಿ ಹೃದಯ ಚಿಕಿತ್ಸೆ ಸಿಕ್ಕಿರುವುದು ಬಹಳ ಸಂತೋಷ. ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ನಗುನಗುತ್ತಾ ಮಾತನಾಡಿದ್ದಾರೆ. ಅವರು ಬೇಗ ಚೇತರಿಸಿಕೊಳ್ಳಲಿ ಎನ್ನುವುದು ಸರ್ಕಾರದ ಆಶಯ ಎಂದು ಹೇಳಿದರು.